ಪಿರಿಯಾಪಟ್ಟಣ: ಪೋಡಿಮುಕ್ತ ಗ್ರಾಮ ಹಾಗೂ ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ತಾಲೂಕಿನ ಮುಮ್ಮಡಿ ಕಾವಲು ಗ್ರಾಮಸ್ಥರು ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರಕ್ಕೆ ಮೂರನೇ ದಿನ ಪೂರೈಸಿತು.
ದಲಿತ ಮುಖಂಡ ಆರ್.ಎಸ್.ದೊಡ್ಡಣ್ಣ ಮಾತನಾಡಿ, ಮುಮ್ಮಡಿ ಕಾವಲು ಗ್ರಾಮದಲ್ಲಿ ಮೂಲಸೌಕರ್ಯ ಕೊರತೆಯಿದ್ದು, ರೈತರು, ದಲಿತರು ಹಾಗೂ ಹಿಂದುಳಿದ ವರ್ಗದವರು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದರು.
ಉತ್ತೇನಹಳ್ಳಿ ಗ್ರಾಮದ ವೆಂಕಟೇಶ್ ಮಾತನಾಡಿ, ಒಂದು ತಿಂಗಳ ಹಿಂದೆ ಉತ್ತೇನಹಳ್ಳಿ ಗ್ರಾಮದ ಸರ್ವೇ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ತಹಸೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಬಳಿಕ ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಇದಾಗಿ ಒಂದು ತಿಂಗಳು ಕಳೆದರೂ ಅಧಿಕಾರಿಗಳು ಸಮಸ್ಯೆ ಬಗೆಹರಿಸಿಲ್ಲ. ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
ದಲಿತ ಮುಖಂಡ ಚಾಮರಾಯನಕೋಟೆ ಜಗದೀಶ್, ತಾಲೂಕು ರೈತ ಸಂಘದ ಅಧ್ಯಕ್ಷ ಶಿವಣ್ಣ ಶೆಟ್ಟಿ, ಮುಖಂಡರಾದ ಲೋಕೇಶ್ ರಾಜೇ ಅರಸ್, ಕಾಳೇಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಗಿರೀಶ್, ಮಾಲಂಗಿ ಗ್ರಾಪಂ ಸದಸ್ಯ ದೊಡ್ಡಯ್ಯ, ಗ್ರಾಮಸ್ಥರಾದ ರಾಮು, ಕಾಳಯ್ಯ, ಮಲ್ಲೇಶ್, ತಿಮ್ಮಯ್ಯ, ನಾರಾಯಣ, ಮಂಜು ಇತರರು ಹಾಜರಿದ್ದರು.