ಚನ್ನರಾಯಪಟ್ಟಣ: ಮಹಿಳೆಯರನ್ನು ಸಬಲರನ್ನಾಗಿಸುವುದರ ಜತೆಗೆ ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಪಟ್ಟಣದ ಗಣಪತಿ ಪೆಂಡಾಲ್ನಲ್ಲಿ ಶನಿವಾರ ಅಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಾಭಿ ವೃದ್ಧಿ ಯೋಜನೆ 12 ವರ್ಷಗಳಿಂದ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಯೋಜನೆಯ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಮಾತನಾಡಿ, ಮಹಿಳೆ ತನ್ನ ಮಕ್ಕಳು, ಮನೆ ಮತ್ತು ತನ್ನ ನಿರ್ವಹಣೆ ಹೇಗೆ ಮಾಡಬೇಕು ಎಂಬುದರ ಕುರಿತಾಗಿ ಮಾಹಿತಿ ನೀಡಲಾಗುತ್ತಿದೆ. ಮಾತೃ ಸಮಾಜಕ್ಕೆ ಸಂಸ್ಕಾರ ಕೊಡುವ ಕಾರ್ಯಕ್ರ ಮವೇ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ. ತಾಲೂಕಿನಲ್ಲಿ 25 ಕೇಂದ್ರಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರೌಢಶಾಲೆ ಶಿಕ್ಷಕಿ ಜಯಮಾಲಾ, ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಪ್ರಾಸ್ತವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ವಕೀಲೆ ಭಾಗ್ಯಾ, ಜ್ಞಾನ ವಿಕಾಸ ಯೋಜನಾಧಿಕಾರಿ ಸವಿತಾ, ಕೆ.ಪ್ರಸಾದ್, ವಲಯ ಮೇಲ್ವಿಚಾರಕ ರಾಘವೇಂದ್ರ ಪೂಜಾರಿ ಇದ್ದರು.