ಧೂಳಖೇಡ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರನ್ನು ಗಡಿಯಲ್ಲಿರುವ ಧೂಳಖೇಡ ಚೆಕ್ಪೋಸ್ಟ್ನಲ್ಲಿ ಕಡ್ಡಾಯವಾಗಿ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗುತ್ತಿದೆ.
ಮಹಾರಾಷ್ಟ್ರದ ಮುಂಬೈ, ಪುಣೆ, ಔರಂಗಬಾದ್, ಲಾತೂರ, ಸೊಲ್ಲಾಪುರ ಭಾಗದಿಂದ ಬರುವ ಬಸ್, ಕಾರ್ ಇನ್ನಿತರ ವಾಹನಗಳ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಗಂಟಲು ದ್ರವ ಸಂಗ್ರಹ, ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ಮಹಾರಾಷ್ಟ್ರ ರಾಜ್ಯಕ್ಕೆ ರಾಜ್ಯದಿಂದ 100 ಕ್ಕೂ ಹೆಚ್ಚು ಸಾರಿಗೆ ಸಂಸ್ಥೆ ಬಸ್ಗಳು ಸಂಚಾರ ಮಾಡುತ್ತವೆ. ಜಿಲ್ಲೆಗೆ ಪ್ರವೇಶ ಮಾಡುವ ಕರ್ನಾಟಕ-ಮಹಾರಾಷ್ಟ್ರ ಬಸ್ಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ, ಪ್ರತಿಯೊಬ್ಬರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಒಳಗೊಂಡು ಸಮಗ್ರ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
ಕೋವಿಡ್ ಮುಂಜಾಗ್ರತೆ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅವಶ್ಯವಾಗಿದ್ದು, ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ವೈದ್ಯಾಧಿಕಾರಿ ಡಾ.ಅರ್ಚನಾ ಕುಲಕರ್ಣಿ ಮನವಿ ಮಾಡಿದ್ದಾರೆ.