ಬೆಂಗಳೂರು: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜಧಾನಿಯ ಜಕ್ಕೂರಿನ ಎಂಸಿಇಎಸಿಎಚ್ ಬಡಾವಣೆಯ ಡಾ.ಶಿವರಾಮ ಕಾರಂತ ನಗರದ 2ನೇ ಹಂತದಲ್ಲಿ ಸೋಮವಾರ ಶಾಖಾ ಗ್ರಂಥಾಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗೆ ಅನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲಾಗುತ್ತಿದೆ ಎಂದರು.
ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ 272 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ ಇದು ಅಭೂತಪೂರ್ವ ಪ್ರಯತ್ನವಾಗಿದೆ. ಕೋವಿಡ್ ಸಂಕಷ್ಟ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಉಪಕ್ರಮವಾಗಿ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆಪ್ ನ್ನು ಲೋಕಾರ್ಪಣೆಗೊಳಿಸಿದೆ. ಸದ್ಯ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಈ ಆ್ಯಪ್ ಬಳಸುತ್ತಿದ್ದಾರೆ. ಒಂದು ಲಕ್ಷಕ್ಕೂ ಮೀರಿದ ಪುಸ್ತಕಗಳು ಈ ಆ್ಯಪ್ನಲ್ಲಿ ಲಭ್ಯವಿವೆ. ಈ ತನಕ 15 ಲಕ್ಷ ಜನರು ಇದರ ಉಪಯೋಗ ಪಡೆದಿದ್ದಾರೆ ಅವರು ಮಾಹಿತಿ ನೀಡಿದರು.
ಇದನ್ನೂ ಓದಿ; ಇದು ಕಾರ್ಯಸಾಧುವಲ್ಲ, ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಂದೂಡಿ; ಮೋದಿಗೆ ಪತ್ರ ಬರೆದು ಒತ್ತಾಯ
ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯಾದ್ಯಂತ 6841 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ದೇಶದಲ್ಲಿಯೇ ಮಾದರಿ ಗ್ರಂಥಾಲಯ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವರ್ಗದ ಜನರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳನ್ನು ಅವಶ್ಯಕ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.
ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘದವರು ಉಚಿತವಾಗಿ ನೀಡಿದ ಈ ನಿವೇಶನದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಈ ಕಟ್ಟಡವು 3 ಅಂತಸ್ತಿನಿಂದ ಕೂಡಿದ್ದು, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ವಿವಿಧ ವಿಭಾಗಗಳನ್ನು ಸೃಜಿಸಲಾಗುವುದು. ಶಿವರಾಮ ಕಾರಂತರಿಗೆ ಮಕ್ಕಳೆಂದರೆ ಬಲುಮೆಚ್ಚುಗೆ ಇರುವುದರಿಂದ ಮಕ್ಕಳಿಗಾಗಿ ಈ ಗ್ರಂಥಾಲಯದಲ್ಲಿ ವಿಶೇಷ ವಿಭಾಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಪ್ರತ್ಯೇಕ ವಿಭಾಗವಿರಲಿದೆ ಎಂದರು.
ಇದನ್ನೂ ಓದಿ; ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವು? ಇನ್ನು ಸಹೋದರಿಯದ್ದೇ ಆಧಿಪತ್ಯ?
ಈ ಕಟ್ಟಡವನ್ನು ಸಾಧ್ಯವಾದಷ್ಟು ತ್ವರಿತವಾಗಿ ನಿರ್ಮಾಣ ಮಾಡಿ ಸಾರ್ವಜನಿಕ ಉಪಯೋಗಕ್ಕೆ ಅರ್ಪಿಸಲಾಗುವುದು ಎಂದು ಹೇಳಿದ ಸಚಿವರು, ಈ ಕುರಿತು ಹೆಚ್ಚಿನ ಗಮನ ಹರಿಸಲು ಇಲಾಖೆ ನಿರ್ದೇಶಕರಿಗೆ ಸೂಚಿಸಿದರು. ಸ್ಥಳೀಯರ ಬೇಡಿಕೆಯಂತೆ ಈ ಗ್ರಂಥಾಲಯದ ಮುಂದೆ ಡಾ.ಶಿವರಾಮ ಕಾರಂತರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.
ಪಾಲಿಕೆ ಆಡಳಿತ ಪಕ್ಷದ ನಾಯಕ ಕೆ.ಎ. ಮುನೀಂದ್ರಕುಮಾರ್, ಹಿರಿಯ ಕಲಾವಿದ ಬಿ.ಕೆ.ಎಸ್. ವರ್ಮಾ, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶಕುಮಾರ ಎಸ್. ಹೊಸಮನಿ ಇತರರು ಹಾಜರಿದ್ದರು.
ಮೆಟ್ರೋ ರೈಲು ಶುರುವಾಗುತ್ತೆ, ಶಾಲಾ- ಕಾಲೇಜುಗಳು ಮುಚ್ಚಿರುತ್ತೆ; ಅನ್ಲಾಕ್ 4.0 ಹೀಗಿರುತ್ತೆ…!