ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ.
ವಿದ್ವಂಸಕ ಕೃತ್ಯದ ಬೆದರಿಕೆ ಒಡ್ಡಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಸಾರ್ವಜನಿಕರ ನೆಮ್ಮದಿ ಕದಡುವುದು ಇಂತಹ ಯಾವುದೇ ದುಷ್ಟ ಆಲೋಚನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಘಟನೆಯ ಹಿಂದಿರುವ ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ.
Certain schools in Bengaluru city have received emails today morning indicating 'bomb threat'. Anti sabotage and bomb detection squads have been pressed into service to verify and ascertain. The calls seem to be hoax. Even then all efforts will be made to trace the culprits. pic.twitter.com/QqBaSuJ11W
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) December 1, 2023
ಉದ್ಯಾನ ನಗರಿ ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ. ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ, ಸದಾಶಿವನಗರದ ನೀವ್ ಅಕಾಡೆಮಿ, ಯಲಹಂಕದ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ತೆರಳಿ, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಬಾಂಬ್ ಬೆದರಿಕೆ ಕುರಿತು ಮಾಹಿತಿ ನೀಡಿದ್ದು, ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಆಗ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ. ಮಕ್ಕಳು, ಪೋಷಕರು ಭಯ, ಆತಂಕಪಡುವ ಅಗತ್ಯವಿಲ್ಲ. ನಮ್ಮ ಸಿಬ್ಬಂದಿ ಪರಿಶೀಲನೆ ಮುಂದುವರೆಸಿದ್ದಾರೆ. ಇದು ಹುಸಿ ಬಾಂಬ್ ಕರೆಯೋ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ ಎಂದು ತಿಳಿಸಿದರು.
ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ಇಮೇಲ್ನಲ್ಲಿ ಏನಿದೆ, ಯಾರು ಈ ಮುಜಾಹಿದ್ದಿನ್?