More

    ರಾಜ್ಯಪಾಲರ ಭಾಷಣಕ್ಕೆಅಡ್ಡಿ, ಎನ್‌ಎಸ್‌ಯುಐ ಕಾರ್ಯಕರ್ತರ ಬಂಧನ

    ಶಿವಮೊಗ್ಗ: ಕುವೆಂಪು ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲ, ಕುಲಾಧಿಪತಿ ಥಾವರಚಂದ್ ಗೆಹಲೋತ್ ಭಾಷಣದ ವೇಳೆ ವಿವಿಯಲ್ಲಾಗುತ್ತಿರುವ ಅಹಿತಕರ ಬೆಳವಣಿಗೆಗಳನ್ನು ಖಂಡಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಕುಲಪತಿ ವಿರುದ್ಧ ಘೋಷಣೆ ಕೂಗಿ, ಕಪ್ಪು ಬಾವುಟ ಪ್ರದರ್ಶಿಸಿದರು. ಕುಲಾಧಿಪತಿಗಳ ಭಾಷಣಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಭಾಷಣದ ಬಳಿಕ ಕುಲಾಧಿಪತಿಗಳೇ ಪ್ರತಿಭಟನಾಕಾರರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆಗಳನ್ನು ಆಲಿಸಿದ್ದು ವಿಶೇಷವಾಗಿತ್ತು.

    ಕುವೆಂಪು ವಿವಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿದ್ದು, ವಿವಿ ಗೌರವಕ್ಕೆ ಧಕ್ಕೆಯಾಗುವುದರ ಜತೆಗೆ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿದ ಎನ್‌ಎಸ್‌ಯುಐ ಕಾರ್ಯಕರ್ತರು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ವಿರುದ್ಧ ಘೋಷಣೆ ಕೂಗಿ ಭಾಷಣಕ್ಕೆ ಅಡ್ಡಿಪಡಿಸಿದರು. ಆಗ ಕಾರ್ಯಕ್ರಮದಲ್ಲಿ ಕೆಲಕಾಲ ಗೊಂದಲ ಉಂಟಾಯಿತು.
    ಅತಿಥಿ ಉಪನ್ಯಾಸಕರ ಅಕ್ರಮ ನೇಮಕಾತಿ ಬಗ್ಗೆ ತನಿಖೆ ನಡೆಸಬೇಕು. ವಿವಿಯ ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ವಿವಿಯ ಎಲ್ಲ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
    ವಿವಿ ವ್ಯಾಪ್ತಿಗೊಳಪಡುವ ಎಲ್ಲ ಕಾಲೇಜುಗಳಲ್ಲಿ ಮೂಲ ಸೌಲಭ್ಯ ಒದಗಿಸಬೇಕು. ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಭ್ರಷ್ಟಾಚಾರ ಆರೋಪ ಹೊತ್ತಿರುವ ಎಲ್ಲ ಅಧಿಕಾರಿಗಳನ್ನೂ ತಕ್ಷಣ ವಜಾ ಮಾಡಬೇಕು. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸೂಚನೆ ನೀಡಬೇಕು. ವಿವಿಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸಬೇಕು. ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ, ಅಂಕಪಟ್ಟಿ ಹಾಗೂ ಫಲಿತಾಂಶದ ಬಗ್ಗೆ ಕೂಡಲೇ ಗಮನಹರಿಸಬೇಕು. ಎನ್‌ಇಪಿ ನೆಪವೊಡ್ಡಿ ಏರಿಸಿದ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡಬೇಕು ಎಂದು ಕುಲಾಧಿಪತಿಗಳ ಗಮನಕ್ಕೆ ತಂದರು.
    ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ವಿವಿ ಕುಲಪತಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಅಲ್ಲದೆ ಈ ಎಲ್ಲ ಸಮಸ್ಯೆಗಳಿಗೆ ಜು.20ರೊಳಗೆ ಪರಿಹಾರ ದೊರಕಿಸಿಕೊಡುವುದಾಗಿ ಕುಲಪತಿ ಲಿಖಿತ ಭರವಸೆ ನೀಡಿದ್ದರು. ಆದರೆ ಇದುವರೆಗೂ ಈಡೇರಿಲ್ಲ. ಆದ್ದರಿಂದ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡುತ್ತಿರುವುದಾಗಿ ತಿಳಿಸಿದರು.
    ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದರು. ಕುಲಾಧಿಪತಿಗಳು ತಮ್ಮ ಭಾಷಣ ಮುಗಿಸಿದ ನಂತರ ಪ್ರತಿಭಟನಾಕಾರರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆಯನ್ನು ಆಲಿಸಿದರಲ್ಲದೆ, ಬೇಡಿಕೆಗಳನ್ನು ಪರಿಶೀಲಿಸಿ ಈಡೇರಿಸುವ ಭರವಸೆ ನೀಡಿದರು.
    ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್, ಜಿಲ್ಲಾ ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರಾಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಮುಖಂಡರಾದ ರವಿ, ಚಂದ್ರೋಜಿ ರಾವ್, ಪ್ರದೀಪ್, ಪ್ರಮೋದ್, ಅಶೋಕ್, ಲಿಂಗರಾಜು ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts