ಚಾಮರಾಜನಗರ: ಕೊಳ್ಳೇಗಾಲದ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೆ ಬರುವ ತಾಲೂಕಿನ ಕರಳಕಟ್ಟೆ ಗ್ರಾಮದಲ್ಲಿ ಫೆ.29ರಂದು ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ 5 ಲಕ್ಷ ರೂ. ಪರಿಹಾರ ಚೆಕ್ ಅನ್ನು ಇತ್ತೀಚೆಗೆ ವಿತರಣೆ ಮಾಡಿದರು.
ಕರಳಕಟ್ಟೆ ಗ್ರಾಮದ ಸಣ್ಣಮಾದ ಆನೆ ದಾಳಿಗೆ ಸಿಲುಕಿ ಮೃತಪಟ್ಟ ಹಿನ್ನೆಲೆಯಲ್ಲಿ ಬಿಆರ್ಟಿ ಅರಣ್ಯ ವ್ಯಾಪ್ತಿಯ ಎಸಿಎಫ್ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದರು.
ಅದರಂತೆ, ಚಾಮರಾಜನಗರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಸಮ್ಮುಖದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮೃತ ಸಣ್ಣಮಾದ ಅವರ ಪತ್ನಿ ಜಡೇ ಮಾದಮ್ಮ ಅವರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು. ಹುಲಿ ಸಂರಕ್ಷಿತಾ ಪ್ರತಿಷ್ಠಾನ ನಿಧಿಯಿಂದ ಸದ್ಯಕ್ಕೆ 5 ಲಕ್ಷ ರೂ. ಅನ್ನು ಸಂತ್ರಸ್ತ ಕುಟುಂಬಕ್ಕೆ ಅರಣ್ಯ ಇಲಾಖೆ ನೀಡಿದ್ದು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಇನ್ನುಳಿದ ಪರಿಹಾರದ ಹಣವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿಆರ್ಟಿ ಅರಣ್ಯ ವಲಯದ ಆರ್ಎಫ್ಒ ವಾಸು, ತಿಮ್ಮರಾಜೀಪುರ ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜು ಮತ್ತಿತರಿದ್ದರು.