ವಿಜಯಪುರ: ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಐಯುಟಿಯುಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ ಮಾತನಾಡಿ, ಲಾಕ್ಡೌನ್ನಿಂದಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರನ್ನು ರಾಜ್ಯದ ವಿವಿಧ ಗ್ರಾಮಗಳಿಗೆ ತಲುಪಿಸಲು ಸರ್ಕಾರದಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕಿದೆ. ನಮ್ಮ ರಾಜ್ಯದ ಕಾರ್ಮಿಕರು ಇತರ ರಾಜ್ಯಗಳಲ್ಲಿ ದುಡಿಯಲು ಹೋಗಿದ್ದಾರೆ. ಅವರ ರಕ್ಷಣೆಗಾಗಿ ಸರ್ಕಾರ ನಿಲ್ಲಬೇಕಿದೆ. ತಮ್ಮ ಸ್ವಂತ ಊರುಗಳಿಗೆ ಹೋಗಲು ನೂರಾರು ಕಿ.ಮೀ. ನಡೆದುಕೊಂಡು ಬರುತ್ತಿದ್ದಾರೆ. ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ. ಕಾರ್ಮಿಕರನ್ನು ಸ್ವಗ್ರಾಮಕ್ಕೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಒತ್ತಾಯಿಸಿದರು.
ಮುಖಂಡರಾದ ಲಕ್ಷಣ ಹಂದ್ರಾಳ, ಆಕಾಶ ರಾಮತೀರ್ಥ, ಶೋಭಾ ಯರಗುದ್ರಿ ಇತರರು ಭಾಗವಹಿಸಿದ್ದರು.