More

    ಕುಡಿಯುವ ನೀರಿನ ಸಮಸ್ಯೆ ತುರ್ತು ಪರಿಹಾರಕ್ಕೆ ಡಿಸಿ ಸೂಚನೆ

    ಉಡುಪಿ: ನಗರ ಅಥವಾ ಗ್ರಾಮೀಣ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ನೀರಿನ ಸಮಸ್ಯೆಗಳನ್ನು 24 ಗಂಟೆ ಒಳಗಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು.

    ಮಂಗಳವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ನೀರೆ, ಪೆರ್ಡೂರು, ಮುದ್ರಾಡಿ, ಬೆಳ್ವೆ, ಉಪ್ಪುಂದ ಗ್ರಾಮದ ಕೆಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಎಸ್​.ಎಲ್​.ಆರ್​.ಎಂ. ವಾಹನಗಳಲ್ಲಿ ಸಿಂಟ್ಯಾಕ್ಸ್​ಗಳನ್ನು ಅಳವಡಿಸಿಕೊಂಡು ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದರಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.
    ತಾಲೂಕು ಮಟ್ಟದಲ್ಲಿ ರಚಿಸಲಾದ ಟಾಸ್ಕ್​ ಫೋರ್ಸ್​ ಸಮಿತಿಗಳು ನಿರಂತರವಾಗಿ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು. ಟ್ಯಾಂಕರ್​ ಮೂಲಕ ನೀರು ಸರಬರಾಜು ಮಾಡಿದ್ದಲ್ಲಿ, ಸರಬರಾಜುದಾರರಿಗೆ ಹದಿನೈದು ದಿನಗಳ ಒಳಗಾಗಿ ಹಣ ಪಾವತಿ ಮಾಡಬೇಕು. ಹಣ ಪಾವತಿಗೂ ಮುನ್ನ ಸರ್ಕಾರದ ಕಾರ್ಯಸೂಚಿಯನ್ವಯ ನಿಗದಿತ ನಮೂನೆಯ ದಾಖಲೆಗಳನ್ನು ಒದಗಿಸಿ, ಅನುಮೋದನೆ ಪಡೆದುಕೊಳ್ಳಬೇಕು ಎಂದರು.
    ಜಿಲ್ಲೆಯಲ್ಲಿ 2.20 ಲಕ್ಷ ಕ್ಕೂ ಹೆಚ್ಚು ಜಾನುವಾರುಗಳಿದ್ದು, ಮುಂದಿನ 14 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯತೆ ಇದೆ. ಜಾನುವಾರುಗಳಿಗೆ ಮೇವಿನ ಕೊರತೆ ಈವರೆಗೂ ಕಂಡುಬಂದಿಲ್ಲ. ಜಾನುವಾರುಗಳಿಗೆ ಮೇವಿನ ಅಭಾವವಾದಲ್ಲಿ ರೈತರು ಗೋಶಾಲೆಗಳಿಗೆ ದನ-ಕರುಗಳನ್ನು ಬಿಡಬಹುದು. ಸರ್ಕಾರಿ ದರದಲ್ಲಿ ಮೇವು ನೀಡಲಾಗುವುದು. ಹಾಲು ಉತ್ಪಾದಕರ ಒಕ್ಕೂಟದ ಮೂಲಕ ಮೇವು ಮಿನಿಕಿಟ್​ಗಳನ್ನು ರೈತರಿಗೆ ವಿತರಿಸಿದ್ದು, 979.5 ಎಕರೆ ಪ್ರದೇಶದಲ್ಲಿ ಮೇವು ಬೆಳೆಸಲಾಗಿದ್ದು, ಸುಮಾರು 9,795 ಮೆಟ್ರಿಕ್​ನಷ್ಟು ಉತ್ಪಾದನೆ ಮಾಡಲಾಗಿದೆ. ಇವುಗಳ ಜೊತೆಯಲ್ಲಿ ಪಶು ಆಹಾರಗಳನ್ನು ಸಹ ರೈತರಿಗೆ ಒದಗಿಸಲಾಗಿದೆ ಎಂದರು.

    ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ತೋಡು ಹಾಗೂ ಚರಂಡಿಗಳಲ್ಲಿರುವ ಹೂಳು, ತರಗೆಲೆ, ಕಸ-ಕಡ್ಡಿಗಳನ್ನು ತೆರವುಗೊಳಿಸಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗಳಿಗೆ ನುಗ್ಗದಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
    ಮಳೆ-ಗಾಳಿಯಿಂದ ವಿದ್ಯುತ್​ ಕಂಬಗಳು ಹಾಗೂ ವಿದ್ಯುತ್​ ತಂತಿಗಳು ತುಂಡಾದಲ್ಲಿ ಕೂಡಲೇ ಅವುಗಳನ್ನು ಬದಲಾಯಿಸಲು ಸಿದ್ಧರಾಗಿರಬೇಕು. ವಿದ್ಯುತ್​ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಬೇಕು. ರಸ್ತೆ ಬದಿಯಲ್ಲಿರುವ ಅಪಾಯಕಾರಿ ಹಾಗೂ ವಿದ್ಯುತ್​ ಲೈನ್​ಗಳಿಗೆ ತೊಂದರೆ ಉಂಟುಮಾಡುವ ಮರಗಳನ್ನು ತೆರೆವುಗೊಳಿಸಲು ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದರು.

    ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್​, ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts