ಕೊಪ್ಪಳ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಆರಂಭಿಸಿ. ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ಜಿಲ್ಲಾ ಕೌನ್ಸಿಲ್ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ ಕಲಿಸುತ್ತದೆ. ಜಿಲ್ಲೆಯ ಎಲ್ಲ ಶಾಲಾ&ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಕಡ್ಡಾಯವಾಗಿ ಇರಲಿ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು.
ಪ್ರಮುಖ ಸಂದರ್ಭಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅಭ್ಯರ್ಥಿಗಳು ಸ್ವಯಂ ಪ್ರೇರಿತವಾಗಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಜಿಲ್ಲಾ ಸಂಸ್ಥೆಯಿಂದ ಆಸಕ್ತ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ, ಸಮವಸ್ತ್ರ ಒದಗಿಸಿ. ಔಪಚಾರಿಕ ಶಿಕ್ಷಣದೊಂದಿಗೆ ಬದುಕಿನ ಶಿಸ್ತು ಕಲಿಸಲು ಕ್ರಮವಹಿಸುವಂತೆ ನಿರ್ದೇಶಿಸಿದರು.
ಜಿಲ್ಲಾ ಪ್ರಧಾನ ಆಯುಕ್ತ ಎಚ್.ಎಂ.ಸಿದ್ದರಾಮಸ್ವಾಮಿ ಮಾತನಾಡಿ, 2022-23ನೇ ಸಾಲಿನ ಚಟುವಟಿಕೆಗಳ ವರದಿ, ಲೆಕ್ಕಪತ್ರಗಳ ವರದಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದ ಅಭಿವೃದ್ದಿ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಸಂಸ್ಥೆಯಲ್ಲಿನ ಕೊರತೆಗಳನ್ನು ಸರಿಪಡಿಸಲು ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಡಿಡಿಪಿಐ ಎಸ್.ಎಸ್.ಬಿರಾದಾರ, ವಕೀಲ ರಾಘವೇಂದ್ರ ಪಾನಗಂಟಿ, ಉಪಾಧ್ಯೆ ಅರುಣಾ ವಸ್ತ್ರದ, ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಚೌಕಿಮಠ, ಕಲ್ಯಾಣ ಕರ್ನಾಟಕ ಉಸ್ತುವಾರಿ ಪಿ.ಮಲ್ಲೇಶ್ವರಿ ಜುಜಾರೆ ಇತರರಿದ್ದರು.