ಕೊಪ್ಪಳ: ಲೋಕ ಸಭೆ ಚುನಾವಣೆ ಅಂಗವಾಗಿ ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಮೇ 5ರಿಂದ 8ವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶಿಸಿದ್ದಾರೆ.
ಮೇ 7ರಂದು ಮತದಾನ ಇರಲಿದೆ. ಮತದಾನ ಅಂತ್ಯಗೊಳ್ಳುವ 48 ಗಂಟೆ ಪೂರ್ವದಲ್ಲಿ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಮೇ 5ರ ಸಂಜೆ 6 ಗಂಟೆಯಿಂದ ಮೇ 8ರ ಬೆಳಗ್ಗೆ 6 ಗಂಟೆವರೆಗೆ ವಿವಿಧ ಷರತ್ತುಗಳಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿ ಇರಲಿದೆ. ಗುಂಪು ಸೇರುವಿಕೆ, ಮೆರವಣಿಗೆ, ಸಭೆ, ಸಮಾರಂಭ ಜರುಗಿಸುವಂತಿಲ್ಲ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಮಾರಕಾಸ್ತ್ರ ಹಿಡಿದು ಓಡಾಡುವಂತಿಲ್ಲ.
ಮತಗಟ್ಟೆ ಕೇಂದ್ರ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲು, ಖಾರ ಪಧಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಮತಗಟ್ಟೆ ಬಳಿ ಕೊಂಡೊಯ್ಯುವಂತಿಲ್ಲ. ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ, ಮತದ ಓಲೈಕೆ ಮಾಡುವಂತಿಲ್ಲ. ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಲು ರ್ನಿಬಂಧವಿಲ್ಲ. ಆದರೆ 5 ಜನರಿಗಿಂತ ಹೆಚ್ಚಿನ ಗುಂಪು ಕೂಡಿಕೊಂಡು ಹೋಗುವಂತಿಲ್ಲ ಎಂದು ತಿಳಿಸಿದ್ದಾರೆ.