ಕೊಪ್ಪಳ: ಮಧುಮೇಹ ಖಾಯಿಲೆ ನಿಯಂತ್ರಣ ಮತ್ತು ತಡೆಗಟ್ಟುವಲ್ಲಿ ವೈದ್ಯಾಧಿಕಾರಿಗಳ ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಡಿಎಚ್ಒ ಡಾ.ಲಿಂಗರಾಜು.ಟಿ ಹೇಳಿದರು.
ನಗರದ ಜಿಪಂ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಮಧುಮೇಹ ದಿನಾಚರಣೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜೀವನಶೈಲಿಯಿಂದ ಬರುವ ರೋಗಗಳಲ್ಲಿ ಮಧುಮೇಹ ಕೂಡ ಒಂದಾಗಿದ್ದು, ಜೀವನಶೈಲಿಯನ್ನು ಬದಲಾವಣೆ ಮಾಡಿ ಪೌಷ್ಠಿಕ ಆಹಾರ ಸೇವನೆ, ದೈಹಿಕ ಚಟುವಟಿಕೆಯಿಂದ ಇರುವುದು. 30 ವರ್ಷ ಮೇಲ್ಪಟ್ಟವರು ವರ್ಷಕ್ಕೆ ಒಂದು ಬಾರಿ ರಕ್ತ ಪರೀಕ್ಷೆ ಮಾಡಿಸುವಂತೆ ಅರಿವು ಮೂಡಿಸುವುದು ಹಾಗೂ ಪತ್ತೆಯಾದ ಮಧುಮೇಹ ರೋಗಿಗಳಿಗೆ ಚಿಕಿತ್ಸೆ ನೀಡುವುದು ಎಲ್ಲಾ ವೈದ್ಯಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಹಾಗೂ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಮತ್ತು ತಪಾಸಣಾ ಶಿಬಿರ ಹಮ್ಮಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮಧುಮೇಹಿಗಳು ಸರಿಯಾಗಿ ಚಿಕಿತ್ಸೆ ಪಡೆಯುವುದರ ಮೂಲಕ ಖಾಯಿಲೆಯನ್ನು ದೂರವಿಡಬಹುದು. ಜೀವನ ಶೈಲಿ ರೋಗಗಳು ಇಂದಿನ ವೈದ್ಯಲೋಕಕ್ಕೆ ಸವಾಲಾಗಿವೆ. ಮನುಷ್ಯ ಆಧುನಿಕನಾದಂತೆ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ$್ಯಕ್ಕೆ ಹೆಚ್ಚಿನ ತೊಂದರೆಗಳು ಕಾಣಿಸಿಕೊಂಡು ಆಹಾರ ಕ್ರಮದಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆ ಇಲ್ಲದ ಜೀವನ ಹಾಗೆ ಮಾನಸಿಕ ಒತ್ತಡದಿಂದಾಗಿ ಅನೇಕ ರೋಗಗಳು ಶಾರೀರಿಕ ಹಾಗೂ ಮಾನಸಿಕವಾಗಿ ದಾಳಿ ಮಾಡುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ ಎಂ.ಎಚ್ ಜಿಲ್ಲಾ ಕ್ಷಯರೋಗ ನಿಮೂರ್ಲನಾಧಿಕಾರಿ ಡಾ. ಶಶಿಧರ, ಕುಷ್ಠರೋಗ ನಿಮೂರ್ಲನಾಧಿಕಾರಿ ಡಾ.ಪ್ರಕಾಶ ಎಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ, ಕೊಪ್ಪಳ ವೈದ್ಯಕಿಯ ಮಹಾವಿದ್ಯಾಲಯದ ಮೆಡಿಸಿನ್ ಪ್ರೋಫೆಸರ್ ಡಾ.ಶಿವಕುಮಾರ, ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಇತರರಿದ್ದರು.