ಕೊಪ್ಪಳ: ರಾಜ್ಯದ ಪ್ರಮುಖ ದೇವಾಲಯಗಳ ಅಭಿವೃದ್ಧಿಗೆ ಯೋಜಿಸಲಾಗಿದೆ. ಚಾಮುಂಡಿ ಬೆಟ್ಟ, ಸವದತ್ತಿ ಯಲ್ಲಮ್ಮ ಪ್ರಾಧಿಕಾರ ರಚನೆ ಘೋಷಣೆ ಮಾಡಿದ್ದೇವೆ. ಅಂಜನಾದ್ರಿ, ಹುಲಿಗೆಮ್ಮ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ. ಪ್ರಾಧಿಕಾರ ರಚನೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಮಂಗಳವಾರ ತಾಲೂಕಿನ ಹುಲಿಗೆಮ್ಮ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ರಾಜ್ಯದ ಪ್ರಮುಖ ದೇವಸ್ಥಾನಗಳನ್ನು ಅಭಿವೃದ್ಧಿ ಮಾಡಲಾಗುವುದು. ಎಲ್ಲೆಲ್ಲಿ ಕೋಟ್ಯಂತರ, ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಅಲ್ಲೆಲ್ಲ ಮೂಲ ಸೌಕರ್ಯ ಕಲ್ಪಿಸಲಾಗುವುದು.ಅಂಜನಾದ್ರಿ, ನಂಜನಗೂಡು ನಂಜುಂಡೇಶ್ವರ, ಹುಲಿಗೆಮ್ಮ, ಮೈಲಾರ ಲಿಂಗ ಸೇರಿ ಇತರ ಪ್ರಮುಖ ದೇವಸ್ಥಾನಗಳನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಹುಲಿಗೆಮ್ಮ ದೇವಾಲಯದಲ್ಲಿ ಅನುದಾನ ಇದೆ. 30 ಎಕರೆ ಜಾಗ ಖರೀದಿಸಲಾಗಿದೆ. ಕೂಡಲೇ ಮಾಸ್ಟರ್ ಪ್ಲ್ಯಾನ್ ರಚಿಸಲು ನಮ್ಮ ಅಧಿಕಾರಿಗಳಿಗೆ ಸೂಚಿಸಿರುವೆ. ಹಂತ ಹಂತವಾಗಿ ಸೌಲಭ್ಯ ಕಲ್ಪಿಸಲಾಗುವುದು. ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿಲ್ಲಿ 15 ದಿನದಲ್ಲಿ ಅನುಮೋದನೆ ಕೊಡಿಸುವೆ.
ಸಂಪೂರ್ಣ ಅಭಿವೃದ್ಧಿ ಆಗುವವರೆಗೆ ತಾತ್ಕಾಲಿಕವಾಗಿ ಸ್ನಾನಘಟ್ಟ, ಶೌಚಗೃಹಗಳನ್ನು ನಿರ್ಮಿಸಲಾಗುವುದು ಎಂದರು.
ಶಾಸಕ ಜನಾರ್ದನ ರೆಡ್ಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಎಡಿಸಿ ಸಾವಿತ್ರಿ ಕಡಿ ಇತರರಿದ್ದರು.