- ಅಂಜನಾದ್ರಿಗೆ 100 ಕೋಟಿ
- ಹುಲಿಗಿ ಅಭಿವೃದ್ಧಿಗೆ ಪ್ರಾಧಿಕಾರ
ಕೊಪ್ಪಳ: ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ನಲ್ಲಿ ಕೊಪ್ಪಳ ಜಿಲ್ಲೆಗೆ ಹಲವು ಯೋಜನೆ ಘೋಷಿಸಿದ್ದಾರೆ.
ಕೊಪ್ಪಳ ತಾಲೂಕಿನ ಪ್ರಸಿದ್ಧ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವುದಾಗಿ ತಿಳಿಸಲಾಗಿದೆ. ಇನ್ನು ರಾಮಾಯಣದ ಶ್ರೀರಾಮನ ಬಂಟ ಆಂಜನೇಯ ಜನಿಸಿದ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ 100 ಕೋಟಿ ರೂ. ಘೋಷಿಸಲಾಗಿದೆ.
ಉಳಿದಂತೆ ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ, ಸಂಪರ್ಕ ಮತ್ತು ಮೌಲ್ಯವರ್ಧನೆಯಲ್ಲಿ ಸಹಕಾರ ವಲಯ ಪ್ರಮುಖ ಪಾತ್ರ ವಹಿಸಲಿರುವ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆ ಮೂಲಕ ಯಲಬುರ್ಗಾದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಶೀಥಲಗೃಹ (ಕೋಲ್ಡ್ ಸ್ಟೋರೇಜ್). ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಮತ್ತು ಗದಗ ಸೇರಿ ಒಟ್ಟು 50 ಕೋಟಿ ಮೀಸಲಿಡಲಾಗಿದೆ.
ಯಲಬುರ್ಗಾಕುಕನೂರು ತಾಲ್ಲೂಕಿನಲ್ಲಿ 970 ಕೋಟಿ ಅಂದಾಜು ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ. ಇದು ಅಂತರ್ಜಲ ಹೆಚ್ಚಿಸಲು ಸಹಕಾರಿ. ಕೆಕೆಆರ್ಡಿಬಿ ವತಿಯಿಂದ ವಿಶ್ವವಿದ್ಯಾಲಯ ಘಟಕ ಕಾಲೇಜುಗಳನ್ನು ಅಗತ್ಯವಿರುವ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಆರಂಭಿಸಲು ಕ್ರಮ. 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಪ್ರಾರಂಭಕ್ಕೆ ಕ್ರಮ.
ಕುಕನೂರು ತಾಲ್ಲೂಕಿನ ತಳಕಲ್ನಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಿಟಿಟಿಸಿ ಬಹುಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕ್ರಮ. ಕೊಪ್ಪಳ ವೈದ್ಯಕಿಯ ವಿಜ್ಞಾನ ಸಂಸ್ಥೆ (ಕಿಮ್ಸ್) 450 ಹಾಸಿಗೆ ಆಸ್ಪತ್ರೆಗೆ ಉಪಕರಣ ಖರೀದಿಗಾಗಿ 75 ಕೋಟಿ. ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಹೊಸ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಅರಂಭಕ್ಕೆ ಕ್ರಮ. ಇದರ ಲಾಭ ಕೊಪ್ಪಳ ಜಿಲ್ಲೆಗೂ ಲಭಿಸಲಿದೆ.
ಕೆಕೆಆರ್ಡಿಬಿ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ವೆಚ್ಚದಲ್ಲಿ ಸ್ಥಾಪನೆಗೆ ಕ್ರಮ. ಕಲ್ಯಾಣ ಕರ್ನಾಟಕದಲ್ಲಿ ಹಿಮಫೋಲಿಯಾ ಮತ್ತು ಥಲಸ್ಸೆಮಿಯಾ ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಹಾಗೂ ಕೊಪ್ಪಳದ ಐಸಿಡಿಟಿ ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ. ನೀಡುವುದಾಗಿ ಘೋಷಿಸಲಾಗಿದೆ.