ಸಿಂಧನೂರು: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ಜು.29 ರಂದು ಜಿಲ್ಲಾ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಚ್ಚರಿಸಿ ಉಪ ತಹಸೀಲ್ದಾರ್ ಅಂಬಾದಾಸಗೆ ಶುಕ್ರವಾರ ಮನವಿ ಸಲ್ಲಿಸಿತು.
ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಅನೇಕ ಬಾರಿ ಸರ್ಕಾರದ ಮೇಲೆ ಒತ್ತಡ ಹಾಕಿದ್ದರೂ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ. ಕೋವಿಡ್-19 ಸಂದರ್ಭದಿಂದ ಆಶಾ ಕಾರ್ಯಕರ್ತರ ಶ್ರಮ ಹೆಚ್ಚಿದ್ದರೂ ಸೌಲಭ್ಯ ನೀಡಲು ಮಾತ್ರ ಸಾಧ್ಯವಾಗಿಲ್ಲ. 15 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದು ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಜು.29ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ಮಾಡಲಾಗುವುದು. ಕೂಡಲೇ ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ.ಗೌರವಧನ ನೀಡಬೇಕು. ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಂಘದ ಅಧ್ಯಕ್ಷೆ ಉಮಾದೇವಿ, ಮಹೆಬೂಬಿಬಾನು, ಉಮಾದೇವಿ ಆರ್., ಈರಮ್ಮ, ಸರೋಜಾ, ಗಂಗಮ್ಮ ಇತರರಿದ್ದರು.