ಬೆಂಗಳೂರು: ಮುಖ್ಯಮಂತ್ರಿ ಪಟ್ಟಕ್ಕಾಗಿ ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ನಡೆದ ಹಗ್ಗಜಗ್ಗಾಟಕ್ಕೆ ತೆರೆಬಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಇಂದು ರಾಜಧಾನಿಗೆ ಬಂದಿಳಿದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆಶಿ ಅವರು ಆಯ್ಕೆಯಾಗಿದ್ದಾರೆ.
ಸಂಧಾನ ಯಶಸ್ವಿಯಾದ ಬೆನ್ನಲ್ಲೇ ಸಿದ್ದರಾಮಯ್ಯ ಮತ್ತು ಡಿಕೆಶಿ ಸಂಜೆ 6.30ರ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಉಭಯ ನಾಯಕರು ಬಂದಿಳಿದರು. ಈ ವೇಳೆ ಎಂಬಿ ಪಾಟೀಲ್ ಸೇರಿದಂತೆ ಕೆಲ ಶಾಸಕರು ಆಗಮಿಸಿ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕೂಡ ಸಿದ್ದು ಮತ್ತು ಡಿಕೆಶಿ ಜತೆ ಆಗಮಿಸಿದ್ದಾರೆ.
ಇದನ್ನೂ ಓದಿ: ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ…
ಶಾಸಕಾಂಗ ಪಕ್ಷದ ಸಭೆ
ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ, ಪರಿಷತ್ ಸದಸ್ಯರು ಮತ್ತು ಸಂಸದರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಸಭೆ ಬಳಿಕ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಭವನಕ್ಕೆ ತೆರಳಲಿದ್ದಾರೆ. ನಂತರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಬಳಿಕ ರಾಜ್ಯಪಾಲರಿಂದ ಸರ್ಕಾರದ ರಚನೆಗೆ ಹಸಿರು ನಿಶಾನೆ ಸಿಗಲಿದೆ.
ಮೇ 20ರ ಶನಿವಾರದಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಗರದ ಕಂಠೀರವ ಸ್ಟೇಡಿಯಂಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಕಳೆದ ಐದು ದಿನಗಳಿಂದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ದೆಹಲಿಯಲ್ಲಿ ಶತಪ್ರಯತ್ನ ನಡೆಸಿದರು. ಅಂತಿಮವಾಗಿ ಇದರಲ್ಲಿ ಸಿದ್ದರಾಮಯ್ಯಗೆ ಗೆಲುವಾಗಿದೆ. ಹಾಗಂತ ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುವುದಿಲ್ಲ. ಬದಲಿಗೆ ಅಧಿಕಾರ ಹಂಚಿಕೆ ಸೂತ್ರದ ಅಡಿಯಲ್ಲಿ ಸಿದ್ದು ಮತ್ತು ಡಿಕೆಶಿ ನಡುವೆ ಸಿಎಂ ಸ್ಥಾನ ಹಂಚಿಕೆಯಾಗಲಿದೆ. ಈ ಒಂದು ಭರವಸೆ ಮೇಲೆ ಡಿಕೆಶಿ ಸಿಎಂ ಸ್ಥಾನದ ರೇಸ್ನಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಸ್ವತಃ ಸೋನಿಯಾ ಗಾಂಧಿಯವರೇ ಈ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳು ತಿಳಿಸಿವೆ.
ಡಿಕೆಶಿ ಮನವೊಲಿಕೆ ಹಿಂದಿದೆ ಸೋನಿಯಾ ಗಾಂಧಿ ಪಾತ್ರ: ಆ ಒಂದು ಕರೆಗೆ ಕರಗಿದ ಕನಕಪುರದ ಬಂಡೆ