ಬೆಂಗಳೂರು: ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ, ಬ್ಲಾಕ್ ಮೇಲರ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಮಾತನಾಡಿದ್ದಾರೆ.
ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಮಾಡುವ ಟಾಸ್ಕ್ ನೀಡಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ ಎಂದಿದ್ದಾರೆ.
ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ಅವರಂತೆ ನಾನು ಮಾತನಾಡುವುದಿಲ್ಲ. ನಾನು ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಅವರಂತೆ ಮಾತನಾಡಲು ಸಾಧ್ಯವಿಲ್ಲ. ನ್ಯಾಯಾಲಯದ ವಿಚಾರದಲ್ಲಿ ಆ ರೀತಿ ಮಾತನಾಡಿದರೆ ತಪ್ಪಾಗುತ್ತದೆ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ.
ಇದನ್ನೂ ಓದಿ: ಇದು ವಿಶ್ವಕಪ್ ಪಂದ್ಯವಲ್ಲ, ಬಿಸಿಸಿಐ ಕಾರ್ಯಕ್ರಮದ ರೀತಿ ನಡೆಸಲಾಗಿದೆ; ಭಾರತ ವಿರುದ್ಧದ ಸೋಲಿನ ಬೆನ್ನಲ್ಲೇ ಪಾಕ್ ಆರೋಪ
ಪ್ರತಿಪಕ್ಷದವರ ಆರೋಪಕ್ಕೆ ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ, ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ. ಬಿಜೆಪಿಯವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಜನರಿಗೆ ಅವರ ಎಲ್ಲಾ ತರಹದ ಲೂಟಿ ಬಗ್ಗೆ ಗೊತ್ತಾಗುತ್ತದೆ, ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಕೆ.ಸಿ. ವೇಣೂಗೋಪಾಲ್ ಸಭೆ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾನು ಪಕ್ಷದ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲೋಕಸಭೆ ಕ್ಷೇತ್ರಗಳಿಗೆ ಹೋಗಿ ವರದಿ ನೀಡುವಂತೆ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದೆವು. ಈ ಪ್ರಕ್ರಿಯೆ ತಡವಾಗುತ್ತಿರುವುದರಿಂದ ಅದನ್ನು ತ್ವರಿತವಾಗಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ.
ನಿಗಮ ಮಂಡಳಿ ನೇಮಕಾತಿ ಕುರಿತು ಪ್ರತಿಕ್ರಿಯಿಸಿ, ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ನೀಡಬೇಕು. ಪಕ್ಷ ಎಂದರೆ ಎಲ್ಲರೂ ಸೇರುತ್ತಾರೆ. ಎಲ್ಲರಿಗೂ ಸ್ಥಾನಮಾನ ನೀಡಬೇಕು. ಈ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ಒಂದೆರಡು ದಿನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.