More

    ದೇವರು ವರ ಅಥವಾ ಶಾಪ ಕೊಡುವುದಿಲ್ಲ; ಅವಕಾಶ ಮಾತ್ರ ಕೊಡುತ್ತಾನೆ ಎಂದ ಡಿಕೆಶಿ!

    ಬೆಂಗಳೂರು: ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಈಗ ರಾಜ್ಯದಲ್ಲಿ ಬದಲಾವಣೆ ತರಲು ದೇವರು ನಮಗೆ ಒಂದು ಅವಕಾಶ ಕಲ್ಪಿಸಿದ್ದಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಬಿಜೆಪಿ ತೊರೆದು ವಿಧಾನಪರಿಷತ್ ಸದಸ್ಯತ್ವಕ್ಕೆ ನಿನ್ನೆಯಷ್ಟೇ ರಾಜೀನಾಮೆ ನೀಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರನ್ನು ತಮ್ಮ ನಿವಾಸದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಸುದ್ದಿಗಾರರ ಜತೆ ಮಾತನಾಡಿದರು.

    ಬೊಮ್ಮಾಯಿ ಅವರು ಮತ್ತೆ ತಾವೇ ಸಿಎಂ ಆಗುತ್ತೇನೆ ಎಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘‘ಅಮಿತ್ ಷಾ ಆರಂಭದಲ್ಲಿ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಅಂತ ಹೇಳಿದ್ದರು. ನಂತರ ಮೋದಿ ಮುಖ ನೋಡಿ ಮತ ನೀಡಿ ಎಂದಿದ್ದಾರೆ. ಅಲ್ಲಿಗೆ ಬೊಮ್ಮಾಯಿ ನಾಯಕತ್ವದ ಮೇಲೆ ನಂಬಿಕೆ ಇಲ್ಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಬೊಮ್ಮಾಯಿ ಅವರು ನಮ್ಮ ಗ್ಯಾರಂಟಿ ಕಾರ್ಡನ್ನು ಬೋಗಸ್ ಕಾರ್ಡ್ ಎಂದಿದ್ದಾರೆ. ನಾನು ಕೆಲ ದಿನಗಳಲ್ಲಿ ಅವರ ಪ್ರಣಾಳಿಕೆ ಮುಂದಿಟ್ಟು ಯಾರದ್ದು ಬೋಗಸ್ ಅಂತ ಹೇಳುತ್ತೇನೆ. ನಾನು ಅವರ ಜತೆ ಚರ್ಚೆ ಮಾಡಲು ಸಿದ್ಧ. ನಮ್ಮ ಸ್ಥಾನಮಾನಕ್ಕೆ ತಕ್ಕಂತಹ ಯಾವುದೇ ನಾಯಕರು ಮುಂದೆ ಬಂದರೆ ಯಾವುದೇ ವೇದಿಕೆಯಲ್ಲಿ ಚರ್ಚೆ ಮಾಡಲು ಸಿದ್ಧ. ನಾವು ಬಸವಣ್ಣ, ಶಿಶುನಾಳ ಶರೀಫರ ಅನುಯಾಯಿಗಳು. ಕೊಟ್ಟ ಮಾತಿನಂತೆ ನಡೆಯುತ್ತೇವೆ. ನಾವು ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿ ಮಾಡಿಯೇ ತೀರುತ್ತೇವೆ’’ ಎಂದರು.

    ಸಿದ್ದರಾಮಯ್ಯ ಅವರನ್ನು ಸೋಲಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ‘‘ಸಿದ್ದರಾಮಯ್ಯ ಅವರ ಬಗ್ಗೆ ಕುಮಾರಸ್ವಾಮಿ ಅವರು ಪ್ರೀತಿ ತೋರುವ ಅಗತ್ಯವಿಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೇಳಿದಾಗ ಕುಮಾರಸ್ವಾಮಿ ಏನೆಲ್ಲಾ ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ನಮ್ಮ ಶಾಸಕಾಂಗ ಪಕ್ಷದ ನಾಯಕರು. ಅವರು ತಮ್ಮನ್ನು ಗೆಲ್ಲಿಸಿದ ಜನರ ಋಣ ತೀರಿಸಬೇಕು ಅಂತ ಬಾದಾಮಿ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಿ ಕ್ಷೇತ್ರದ ಚಿತ್ರಣವನ್ನೇ ಬದಲಿಸಿದ್ದಾರೆ. ಮೈಸೂರಿನಲ್ಲಿ ಅವರದೇ ಆದ ಕೊಡುಗೆ ಇದೆ. ಅವರು ಹೈಕಮಾಂಡ್ ಒಪ್ಪಿದರೆ ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಹೈಕಮಾಂಡ್ ಕೂಡ ನನಗೆ ಮತ್ತು ಅವರಿಗೆ ರಾಜ್ಯ ಪ್ರವಾಸದ ಜವಾಬ್ದಾರಿ ನೀಡಿದ್ದು, ಹೆಚ್ಚು ಸಮಯ ವ್ಯರ್ಥ ಮಾಡುವುದು ಬೇಡ ಅಂತ ಸಲಹೆ ನೀಡಿದ್ದಾರೆ. ನನಗೂ ಕೆಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ ಇದೆ. ಆದರೆ ನಾನು ನನ್ನ ಕ್ಷೇತ್ರದಲ್ಲೇ ಸ್ಪರ್ಧಿಸುತ್ತೇನೆ. ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧಿಸಬೇಕು ಎಂಬ ತೀರ್ಮಾನವನ್ನು ಅವರಿಗೆ ಬಿಡಲಾಗಿದೆ. ಹೈಕಮಾಂಡ್ ಕೂಡ ಅವರ ಮೇಲೆ ಯಾವುದೇ ಒತ್ತಡ ಹೇರುವುದಿಲ್ಲ, ನಾನು ಕೂಡ ಹೇರುವುದಿಲ್ಲ. ಅವರು ಎಲ್ಲಿ ಸ್ಪರ್ಧಿಸುತ್ತಾರೋ ನಾನು ಅಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ’’ ಎಂದು ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಜ್ಯವನ್ನು ಸಾಲದ ಕೂಪಕ್ಕೆ ಕೊಂಡೊಯ್ಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ‘‘ನೀವು ಬಿಜೆಪಿಯ ಪ್ರಣಾಳಿಕೆ ತೆಗೆದು ನೋಡಿ. ಜ. 16ರಂದು ಅವರು ಸರ್ಕಾರದ ವತಿಯಿಂದ ಜಾಹೀರಾತು ನೀಡಿ ಏನು ಹೇಳಿದ್ದಾರೆ? ಪ್ರಣಾಳಿಕೆಯಲ್ಲಿ ರೈತರಿಗೆ 10 ಗಂಟೆ ವಿದ್ಯುತ್ ನೀಡುವುದಾಗಿ ಯಾಕೆ ಹೇಳಿದ್ದಾರೆ? ಇನ್ನು ಸಾಲ ಮನ್ನಾ ವಿಚಾರವಾಗಿ ಹೇಗೆ ಭರವಸೆ ನೀಡಿದ್ದರು? ಈ ಬಗ್ಗೆ ಅವರು ಮೊದಲು ಉತ್ತರ ನೀಡಲಿ’’ ಎಂದರು.

    ವೈಎಸ್ವಿ ದತ್ತಾ ಅವರ ಆಡಿಯೋ ಕುರಿತು ಪ್ರಶ್ನಿಸಿದಾಗ, ‘‘ರಾಜಕೀಯದಲ್ಲಿ ಹೂವಿನ ಹಾರ ಹಾಕುವವರೂ ಇರುತ್ತಾರೆ. ಕಲ್ಲು ಹೊಡೆಯುವವರೂ ಇರುತ್ತಾರೆ. ನಾವು ಎಲ್ಲರ ಸಲಹೆ, ಅಭಿಪ್ರಾಯವನ್ನು ಸ್ವೀಕಾರ ಮಾಡುತ್ತೇವೆ. ಅವರು ಹಿರಿಯರಿದ್ದಾರೆ. ಅವರನ್ನು ಮೇಸ್ಟ್ರು ಅಂತ ಸ್ವೀಕಾರ ಮಾಡಿದ್ದೇವೆ. ಅವರ ಮಾತನ್ನು ನಾವು ಆಶೀರ್ವಾದ ಅಂತ ಸ್ವೀಕರಿಸಿ ಅವರ ಜತೆ ಕೆಲಸ ಮಾಡುತ್ತೇವೆ’’ ಎಂದರು.

    ಪಕ್ಷದಲ್ಲಿ ಟಿಕೆಟ್ ವಿಚಾರವಾಗಿ ಮೂಲ ಕಾಂಗ್ರೆಸಿಗರು ಹಾಗೂ ವಲಸಿಗರ ನಡುವಣ ಸಂಘರ್ಷದ ಬಗ್ಗೆ ಪ್ರಶ್ನಿಸಿದಾಗ, ‘‘ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಭಾವನೆ ಎಲ್ಲರಿಗೂ ಬಂದಿದೆ. ಇದು ಕಾಂಗ್ರೆಸ್ ಹಾಗೂ ಜನತಾದಳದವರಿಗೂ ಗೊತ್ತಿದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇನ್ನೂ ಅರ್ಜಿ ಹಾಕುವವರು ಇದ್ದಾರೆ. ಚಿಂಚನಸೂರ್ ಕೂಡ ಅರ್ಜಿ ಹಾಕಬೇಕಿದೆ. ಯಾರು ಕ್ಷೇತ್ರದಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತಾರೆಯೋ ಅವರಿಗೆ ಅನೇಕ ಅವಕಾಶಗಳಿವೆ. 75 ಪರಿಷತ್, 12 ರಾಜ್ಯಸಭಾ, ಲೋಕಸಭಾ ಹಾಗೂ ನಿಗಮ ಮಂಡಳಿಗಳಿವೆ. ಎಲ್ಲರಿಗೂ ಅಧಿಕಾರವನ್ನು ಹಂಚುತ್ತೇವೆ’’ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts