ಭಟ್ಕಳ: ಕುಡಿಯುವ ನೀರಿನ ಅಭಾವವಿರುವ ಪ್ರದೇಶಗಳನ್ನು ಪಟ್ಟಿ ಮಾಡಿ ನೀರು ಸರಬರಾಜು ಮಾಡಲು ಮುಂದಾಗಬೇಕು. ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಮತ್ತು ಜಾನುವಾರುಗಳ ಮೇವಿಗೆ ಸಮಸ್ಯೆ ಆಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಕ್ಷೇತ್ರದ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಜಾಗೃತಿ ವಹಿಸಿ. ಈ ತಿಂಗಳ ಅಂತ್ಯದೊಳಗೆ ಕುಡಿಯುವ ನೀರಿನ ಸರಬರಾಜಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಭಟ್ಕಳ, ಹೊನ್ನಾವರ ತಹಸೀಲ್ದಾರರಿಗೆ ಸೂಚಿಸಿದರು.
ಭಟ್ಕಳ ತಹಸೀಲ್ದಾರ್ ಕುಡಿಯುವ ನೀರಿಗಾಗಿ ಖಾತೆಯಲ್ಲಿ 52 ಲಕ್ಷ ರೂ. ಇದ್ದರೆ, ಹೊನ್ನಾವರ ತಹಸೀಲ್ದಾರರು 72 ಲಕ್ಷ ರೂ. ಸಂಗ್ರಹವಿದೆ ಎಂದರು.
ಉಪವಿಭಾಗಾಧಿಕಾರಿ ಡಾ. ನಯನಾ, ತಹಸೀಲ್ದಾರ ತಿಪ್ಪೇಸ್ವಾಮಿ, ಹೊನ್ನಾವರ ತಹಸೀಲ್ದಾರ ರವಿರಾಜ, ಭಟ್ಕಳ ತಾಪಂ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ವಿ.ಡಿ. ಮೊಗೇರ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.