ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿವೆ ಎಂದು ಸಾರ್ವಜನಿಕರು ಭಯಪಡುವುದು ಬೇಡ. ಆದರೆ, ಎಲ್ಲರೂ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಜಿಲ್ಲೆಗೆ ಹೊಲಿಸಿದರೆ ನಮ್ಮ ಜಿಲ್ಲೆಯಲ್ಲಿ ಕಡಿಮೆ ಪ್ರಕರಣಗಳಿವೆ. ಅಂದಾಜು ನಾಲ್ಕು ಸಾವಿರ ಪ್ರಕರಣಗಳು ಜುಲೈ, ಆಗಸ್ಟ್ನಲ್ಲಿ ಹೆಚ್ಚಾಗಬಹುದು. ಎಷ್ಟೇ ಪ್ರಕರಣಗಳು ಜಿಲ್ಲೆಯಲ್ಲಿ ಬಂದರೂ ಚಿಕಿತ್ಸೆಗಾಗಿ ಅಗತ್ಯ ವೈದ್ಯಕೀಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ಔಷಧದ ಕೊರತೆಯಿಲ್ಲ. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಸವಣೂರ, ಹಿರೇಕೆರೂರ ಹಾಗೂ ರಾಣೆಬೆನ್ನೂರ ತಾಲೂಕಿನಲ್ಲಿ ಕೋವಿಡ್ ಕೇರ್ ಆಸ್ಪತ್ರೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲ ತಾಲೂಕಿನಲ್ಲಿ ಕೋವಿಡ್ ಆಸ್ಪತ್ರೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 1,200ರಿಂದ 1,400 ಹಾಸಿಗೆಗಳನ್ನು ಸಿದ್ಧಮಾಡಿಕೊಳ್ಳುತ್ತೇವೆ ಎಂದರು.
ಜಿಲ್ಲೆಯಲ್ಲಿ 19 ಖಾಸಗಿ ಆಸ್ಪತ್ರೆಗಳಿದ್ದು, ಅಲ್ಲಿನ ವೈದ್ಯರೊಂದಿಗೆ ಮಾತುಕತೆ ನಡೆಸಲಾಗಿದೆ. ಜಿಲ್ಲೆಯಲ್ಲಿಯೇ ಕೋವಿಡ್ ಮಾದರಿ ಪರೀಕ್ಷೆಗೆ ಲ್ಯಾಬ್ ಕಾರ್ಯ ಆರಂಭವಾಗಿದೆ. ಒಂದು ವಾರ ಕಿಮ್ಸ್ನ ವೈದ್ಯರು ಪರೀಕ್ಷೆಯ ಮೇಲುಸ್ತುವಾರಿ ವಹಿಸಲಿದ್ದಾರೆ. ನಂತರ ಸ್ವತಂತ್ರವಾಗಿ ಪರೀಕ್ಷೆ ನಡೆಯಲಿದೆ. ನಿಗದಿಯಂತೆ ದಿನಕ್ಕೆ 300ರಂತೆ ಸ್ಥಳೀಯವಾಗಿ ಗಂಟಲ ದ್ರವ ಪರೀಕ್ಷೆ ನಡೆಸಲಾಗುವುದು. ಸದ್ಯ ಲ್ಯಾಬ್ನಿಂದ ಜಿಲ್ಲೆಯ 1,800 ಮಾದರಿಗಳ ವರದಿ ಬರಬೇಕಾಗಿದೆ ಎಂದರು.
ಎಡಿಸಿ ಎಂ. ಯೋಗೇಶ್ವರ, ಜಿಪಂ ಸಿಇಒ ರಮೇಶ ದೇಸಾಯಿ, ಎಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿಎಚ್ಒ ಡಾ. ರಾಜೇಂದ್ರ ದೊಡ್ಡಮನಿ, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ. ಪಿ.ಆರ್. ಹಾವನೂರ ಇದ್ದರು.