ನವದೆಹಲಿ: ಇಡಿ ವಿಶ್ವವನ್ನೇ ಬಾಧಿಸುತ್ತಿರುವ ಕರೊನಾ ಪಿಡುಗು ಮುಂದಿನ ಸಾಲಿನ ಕೇಂದ್ರ ಬಜೆಟ್ ಮೇಲೂ ತನ್ನ ಪರಿಣಾಮ ಬೀರುವುದು ನಿಶ್ಚಿತವಾಗಿದೆ. ಆದರೂ, 2021ರ ಮಾರ್ಚ್ 31ರವರೆಗೆ ಬೇರಾವುದೇ ಜನಪ್ರಿಯ ಕಾರ್ಯಕ್ರಮಗಳನ್ನು ನಿರೀಕ್ಷಿಸಬೇಡಿ ಎಂದು ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಜನತೆಗೆ ಮಾಹಿತಿ ನೀಡಿದ್ದಾರೆ.
ಕೋವಿಡ್-19 ಸಂಕಷ್ಟದಿಂದ ಪಾರು ಮಾಡಲು ಕೇಂದ್ರ ಸರ್ಕಾರ ಈಗಾಗಲೆ 20 ಲಕ್ಷ ಕೋಟಿ ರೂ. ಆರ್ಥಿಕ ಪುನಶ್ಚೇತನ ಕಾರ್ಯಕ್ರಮವನ್ನು ಘೋಷಿಸಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ, ಆತ್ಮನಿರ್ಭರ ಭಾರತ ಅಭಿಯಾನ ಯೋಜನೆ ಹಾಗೂ ಮತ್ತಿತರ ವಿಶೇಷ ಕಲ್ಯಾಣ ಯೋಜನೆಗಳಲ್ಲಿ ಈಗಾಗಲೆ ಘೋಷಿಸಲಾಗಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಇನ್ನೊಂದು ವರ್ಷ ಬೇರಾವುದೇ ಜನಪ್ರಿಯ ಕಾರ್ಯಕ್ರಮಗಳ ಘೋಷಣೆಯನ್ನು ನಿರೀಕ್ಷಿಸಬೇಡಿ ಎಂದು ಸ್ಪಷ್ಟಪಡಿಸಿದರು.
ಜನವರಿಯಿಂದ ಮಾರ್ಚ್ವರೆಗಿನ ತ್ರೈಮಾಸಿಕದ ಅವಧಿಯಲ್ಲಿ ಭಾರತದ ಆರ್ಥಿಕ ಪ್ರಗತಿ ಶೇ.3.1 ದಾಖಲಾಗಿದೆ. ಈ ಅವಧಿಯಲ್ಲಿ ಬೆಳವಣಿಗೆಯ ವೇಗ ತುಂಬಾ ಕುಂಠಿತವಾಗಿತ್ತು. ಕೋವಿಡ್-19 ಲಾಕ್ಡೌನ್ನಿಂದಾಗಿ ಪ್ರಗತಿಯ ವೇಗ ಮತ್ತಷ್ಟು ಕುಂಠಿತವಾಗುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ 2021ರ ಮಾರ್ಚ್ವರೆಗೆ ಅಥವಾ ಮುಂದಿನ ಆದೇಶದವರೆಗೆ ಹೆಚ್ಚಿನ ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.