ಧಾರವಾಡ : ಇದೇ ಜುಲೈ 19 ಮತ್ತು 22 ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆಯು ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ತಾಣವಾಗಿಸುವ ಸರ್ವಪ್ರಯತ್ನವನ್ನೂ ಮಾಡಿದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಭಯ ಪಡದೆ, ಪರೀಕ್ಷೆ ಬರೆಯೋಕೆ ನಿರಾತಂಕವಾಗಿ ಬರಬೇಕು ಎಂದು ಧಾರವಾಡದ ಬಿಇಒ ಗಿರೀಶ್ ಪದಕಿ ಅವರು ಕರೆ ನೀಡಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ್ದು, ಪರೀಕ್ಷೆ ಬರೆಯಲು ಬರುವ ಎಲ್ಲಾ ವಿದ್ಯಾರ್ಥಿಗಳಿಗೂ ಆರೋಗ್ಯ ತಪಾಸಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಇರುತ್ತಾರೆ ಮತ್ತು ವಿದ್ಯಾರ್ಥಿಗಳ ದೇಹದ ಉಷ್ಣತೆಯನ್ನು ಪರೀಕ್ಷಿಸಿಯೇ ಒಳಗೆ ಪ್ರವೇಶ ನೀಡಲಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಿವಿಮಾತು
ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಆರೋಗ್ಯ ಕಾರ್ಯಕರ್ತರು, ಸಹಾಯಕರು ಮತ್ತು ಒಂದು ಆ್ಯಂಬುಲೆನ್ಸಿನ ವ್ಯವಸ್ಥೆ ಕೂಡ ಇರುತ್ತದೆ. ಪ್ರತಿಯೊಬ್ಬ ಪರೀಕ್ಷಾ ಮೇಲ್ವಿಚಾರಕರು ಎರಡೂ ಡೋಸ್ ಕರೊನಾ ಲಸಿಕೆಗಳನ್ನು ಪಡೆದಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಭಯ ಇಟ್ಟುಕೊಳ್ಳದೇ ಬಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕು ಎಂದು ಬಿಇಒ ಪದಕಿ ಹೇಳಿದ್ದಾರೆ.
ಮಕ್ಕಳಿಗೆ ಕರೊನಾ ಲಸಿಕೆ : ‘ಮುಗಿಯುವ ಹಂತದಲ್ಲಿ ಕ್ಲಿನಿಕಲ್ ಟ್ರಯಲ್ಸ್’