ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿಂದಿನ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 4ನೇ ಸ್ಥಾನ ಪಡೆದಿತ್ತು. ಈ ಬಾರಿ ರಾಜ್ಯಕ್ಕೇ ಮೊದಲ ಸ್ಥಾನದಲ್ಲಿ ಇರಬೇಕು. ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಇದು ಕಷ್ಟವೇನಲ್ಲ ಎಂದು ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಸಲಹೆ ನೀಡಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಶಿಕ್ಷಣ ಇಲಾಖೆಯಿಂದ ಮಹಾರಾಣಿ ಕಾಲೇಜಿನ ವಾಲ್ಮೀಕಿ ಸಭಾಂಗಣದಲ್ಲಿ ಮಂಗಳವಾರ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವಿಜ್ಞಾನ, ಗಣಿತ ಅಷ್ಟೇ ಅಲ್ಲ, ಎಲ್ಲ ವಿಷಯಗಳಲ್ಲೂ ಸಂಪೂರ್ಣ ಅಂಕ ಪಡೆಯಬೇಕು. ಅದಕ್ಕಾಗಿ ಅಭ್ಯಾಸದಲ್ಲಿ ಪರಿಶ್ರಮ ವಹಿಸಬೇಕು. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರನ್ನು ಆದರ್ಶವಾಗಿಟ್ಟುಕೊಂಡು ಜೀವನದಲ್ಲಿ ಗುರಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿ ಜೀವನ ಅತ್ಯಮೂಲ್ಯ. ಈ ಹಂತದಲ್ಲಿ ಯಾರೂ ಸಮಯ ವ್ಯರ್ಥ ಮಾಡಬಾರದು. ಏಕಾಗ್ರತೆಯಿಂದ ಹೆಚ್ಚು ಅಧ್ಯಯನ ಮಾಡಿದಲ್ಲಿ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದು. ನಿರೀಕ್ಷೆಗಿಂತ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ ಎಂದರು.
ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಓದಿದ್ದನ್ನು ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು. ಯಾವುದೇ ವಿಷಯ ಕುರಿತು ಅನುಮಾನಗಳಿದ್ದರೆ ಶಿಕ್ಷಕರ ಬಳಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಶಾಲೆಯಲ್ಲಿ ಕಲಿತ ಪಾಠವನ್ನು ಮನೆಯಲ್ಲಿ ಒಮ್ಮೆ ಮನನ ಮಾಡಿಕೊಳ್ಳಬೇಕು. ಈ ಮೂರು ಸೂತ್ರಗಳನ್ನು ಪಾಲಿಸಿದರೆ ಎಲ್ಲರೂ ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಲು ಸಾಧ್ಯವಿದೆ ಎಂದು ಸಲಹೆ ನೀಡಿದರು.
ವಿದ್ಯಾಧಿಕಾರಿ ಮಂಜುನಾಥ್, ಮುಖ್ಯ ಶಿಕ್ಷಕ ಕೆ.ಎನ್.ಮಹೇಶ್, ಬಸ್ವಂತ್ಕುಮಾರ್ ಪರೀಕ್ಷೆ ಎದುರಿಸುವ ಸರಳ ಸೂತ್ರಗಳ ಕುರಿತು ಮಾಹಿತಿ ನೀಡಿದರು. ಮಹಾರಾಣಿ, ವಾಸುದೇವ ರೆಡ್ಡಿ, ಎ.ಭೀಮಪ್ಪ ನಾಯಕ ಸಂಯುಕ್ತ, ಸದ್ಗುರು ಕಬೀರಾನಂದ, ಬರಗೇರಮ್ಮ, ಕೋಟೆ ಸರ್ಕಾರಿ ಪ್ರೌಢಶಾಲೆ ಮಕ್ಕಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.