More

    ಕುಲಪತಿಯಾಗಿ ಡಾ. ಶರತ್ ಅನಂತಮೂರ್ತಿ ಅಧಿಕಾರ ಸ್ವೀಕಾರ

    ಶಿವಮೊಗ್ಗ: ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ. ಶರತ್ ಅನಂತಮೂರ್ತಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

    ಪ್ರೊ. ಶರತ್ ಅನಂತಮೂರ್ತಿ ಕರ್ನಾಟಕದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ ಅವರ ಪುತ್ರರಾಗಿದ್ದು ಅಮೆರಿಕಾದ ಪ್ರತಿಷ್ಠಿತ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ. ಬೆಂಗಳೂರು ವಿವಿಯಲ್ಲಿ 2017ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು.
    35ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ಜರ್ನಲ್ಗಳಲ್ಲಿ ಪ್ರಕಟಿಸಿದ್ದಾರೆ. ಇವರ ಲೇಖನಗಳು 350ಕ್ಕೂ ಹೆಚ್ಚು ಸಂಶೋಧನಾ ಮರು ಉಲ್ಲೇಖಗಳನ್ನು ಪಡೆದುಕೊಂಡಿವೆ. 2006ರಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ಕಾಮನ್ವೆಲ್ತ್ ವಿಶ್ವವಿದ್ಯಾಲಯಗಳು ಒಕ್ಕೂಟದಿಂದ ಕಾಮನ್ವೆಲ್ತ್ ಶೈಕ್ಷಣಿಕ ಸಿಬ್ಬಂದಿ ಫೆಲೋಶಿಪ್ ಗೌರವ ನೀಡಲಾಗಿದೆ.
    ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕುವೆಂಪು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವುದು ಹೆಮ್ಮೆಯ ವಿಷಯ. ಅವರ ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು. ವಿವಿಯನ್ನು ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ಕೇಂದ್ರಿತವನ್ನಾಗಿಸಿ ಮುಕ್ತ ಮತ್ತು ನಿರ್ಭಿಡೆಯ ವಾತಾವರಣ ನಿರ್ಮಿಸುವುದರತ್ತ ಗಮನಹರಿಸುವುದಾಗಿ ತಿಳಿಸಿದರು.
    ವಿವಿಯ ನಿಕಟಪೂರ್ವ ಪ್ರಭಾರ ಕುಲಪತಿ ಪ್ರೊ. ಎಸ್.ವಿ.ಕೃಷ್ಣಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಹಣಕಾಸು ಅಧಿಕಾರಿ ಜಿ.ಬಂಗಾರಪ್ಪ, ಪ್ರೊ. ಗುರುಲಿಂಗಯ್ಯ, ಡಾ. ಎಂ.ಆರ್.ಸತ್ಯಪ್ರಕಾಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts