ರಾಯಚೂರು: ನಗರದಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎನ್ನುವುದು ಜಿಲ್ಲೆಯ ಜನರ ಬೇಡಿಕೆಯಾಗಿದ್ದು, ಅದಕ್ಕೆ ನನ್ನ ಸಹಮತವೂ ಇದೆ. ಅಗತ್ಯ ಬಿದ್ದಲ್ಲಿ ಏಮ್ಸ್ ಹೋರಾಟದಲ್ಲಿ ಭಾಗವಹಿಸಲು ಸಿದ್ಧನಿದ್ದೇನೆ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಹೇಳಿದರು.
ಶ್ರೀಮಠದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಅಭಿವೃದ್ಧಿಯಿಂದ ವಂಚಿತವಾಗಿರುವ ರಾಯಚೂರಿನಲ್ಲಿ ಐಐಟಿ ಸ್ಥಾಪನೆಯಾಗಬೇಕಾಗಿತ್ತು. ಅದು ಜಿಲ್ಲೆಯಿಂದ ಕೈತಪ್ಪಿದ್ದು, ಏಮ್ಸ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಮಾತನಾಡಿದ್ದೇನೆ. ಬಜೆಟ್ನಲ್ಲಿ ಘೋಷಣೆ ಮಾಡಿದಂತಹ ಏಮ್ಸ್ ಮಾದರಿ ಆಸ್ಪತ್ರೆ ಬೇಡ, ಏಮ್ಸ್ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ನಮ್ಮ ಭಾಗದಲ್ಲಿಯೂ ಸಾಧು, ಸಂತರ ಸಮ್ಮೇಳನ ಆಯೋಜಿಸುವಂತೆ ಕೇಳಲಾಗಿದೆ. ಮಂತ್ರಾಲಯದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಥಳ ಪರಿಶೀಲನೆ ಮಾಡಲಾಗಿದ್ದು, ಶೀಘ್ರ ಈ ಬಗ್ಗೆ ಮುಂದಿನ ಸಿದ್ಧತೆಗಳು ನಡೆಯಲಿವೆ ಎಂದು ತಿಳಿಸಿದರು.
ಐಎಎಸ್, ಐಪಿಎಸ್ ಅಧಿಕಾರಿಗಳು ಇತರರಿಗೆ ಮಾದರಿಯಾಗುವಂತೆ ಇರಬೇಕು. ಆದರೆ ಕಚ್ಚಾಟ, ವೈಯಕ್ತಿಕ ನಿಂದನೆಗೆ ಇಳಿದಿರುವುದು ಸರಿಯಲ್ಲ. ರಾಜಕಾರಣಿಗಳು ಕೂಡಾ ವೈಯಕ್ತಿಕ ನಿಂದನೆಗಳನ್ನು ಬಿಟ್ಟು ಶಾಂತಿಯುವಾಗಿ ಚುನಾವಣೆ ಎದುರಿಸಬೇಕು ಎಂದು ಡಾ.ಸುಬುಧೇಂದ್ರ ತೀರ್ಥರು ಸಲಹೆ ನೀಡಿದರು.