ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಾಟಕದಲ್ಲಿ ಕೆಟ್ಟ ಪದ ಬಳಸಿದ ಹಿನ್ನೆಲೆಯಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಶಾಲೆಯ ವಿದ್ಯಾರ್ಥಿಗಳು ನಾಟಕದಲ್ಲಿ ಸಿಎಎ ಹಾಗೂ ಎನ್ಆರ್ಸಿ ಜಾರಿಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರದರ್ಶನ ನೀಡಿದ್ದರು. ಈ ವೇಳೆ ಚಹ ಮಾರುತ್ತಿದ್ದ ವ್ಯಕ್ತಿ ಈಗ ನಮ್ಮ ಬಳಿ ದಾಖಲೆ ಕೇಳುತ್ತಾನೆ ಎಂದು ಹೇಳಿ ನಿಂದಿಸಿದ್ದರು. ವಿದ್ಯಾರ್ಥಿಗಳು ಈ ಸಂಭಾಷಣೆ ಹೇಳುವಾಗ ವೇದಿಕೆಯಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದರು. ಸಾಮಾಜಿಕ ಜಾಲ ತಾಣದಲ್ಲಿ ನಾಟಕದ ಈ ದೃಶ್ಯ ವೈರಲ್ ಆಗಿತ್ತು. ಸಾಮಾಜಿಕ ಕಾರ್ಯಕರ್ತ ನೀಲೇಶ್ ಎಂಬುವವರು ಶಿಕ್ಷಣ ಸಂಸ್ಥೆ ಯ ಮುಖ್ಯಸ್ಥ ಡಾ. ಅಬ್ದುಲ್ ಖದೀರ್ ಸೇರಿದಂತೆ ಮೂವರ ವಿರುದ್ಧ ನ್ಯೂಟೌನ್ ಪೊಲೀಸ್ ಠಾಣೆಗೆ ದೇಶ ದ್ರೋಹ ಕಾಯ್ದೆ ಅಡಿ ದೂರು ನೀಡಿದರು.
ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್)