ಬೆಂಗಳೂರು: ರಾಜ್ಯದ ಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
ಬರಗಾಲ ನಿರ್ವಹಣೆ ಮತ್ತು ಕುಡಿಯುವ ನೀರು, ಮೇವಿನ ಬಗ್ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್ ಅವರ ಜತೆ ಶುಕ್ರವಾರ ಸಭೆ ನಡೆಸಿದರು.
ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳನ್ನು ಜಿಲ್ಲಾಧಿಕಾರಿಗಳು ಮೊದಲು ಗುರುತಿಸಬೇಕು. ಇಂತಹ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಖರೀದಿಸಿ ಎಲ್ಲೇ ನೀರಿನ ಸಮಸ್ಯೆ ಕಂಡುಬಂದರೂ 24 ಗಂಟೆಯಲ್ಲಿ ನೀರನ್ನು ಪೂರೈಸಬೇಕು ಎಂದು ನಿರ್ದೇಶನ ನೀಡಿದರು.
ಬೋರ್ ವೆಲ್ ಖರೀದಿಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ದರ ನಿಗದಿಗೊಳಿಸಬೇಕು. ಟ್ಯಾಂಕರ್ ಮೂಲಕ ನೀರನ್ನು ಪೂರೈಸುವುದಾದರೆ, ಟೆಂಡರ್ ಕರೆಯಬೇಕು. 15 ದಿನಗಳ ಒಳಗಾಗಿ ಬಿಲ್ ಪಾವತಿ ಮಾಡಬೇಕು. ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತಿಗಳು ತಮ್ಮ ಖಾತೆಯಲ್ಲಿರುವ ಹಣವನ್ನು ಬಳಸಿಕೊಳ್ಳಬಹುದು. ಕುಡಿಯುವ ನೀರಿಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲೂ ಹಣ ಇದ್ದು ಇದನ್ನು ಬಳಸಿಕೊಳ್ಳಬಹುದು ಎಂದರು.
ಜಿಲ್ಲಾಧಿಕಾರಿಗಳು ಮೇವಿಗೂ ಕೊರತೆಯಾಗದಂತೆ ಜಾಗೃತವಹಿಸಬೇಕು. ಈಗಾಗಲೇ ನೀರಿನ ಲಭ್ಯತೆ ಇರುವ ರೈತರಿಗೆ ಉಚಿತ ಮೇವಿನ ಕಿಟ್ ನೀಡಲಾಗಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೇವಿನ ಕೊರತೆ ಇಲ್ಲ. ಆದರೆ ರಾಜ್ಯದ ಮೇವು ಪಕ್ಕದ ರಾಜ್ಯಕ್ಕೆ ಕಳ್ಳಸಾಗಾಣೆಯಾಗದಂತೆ ನೋಡಿಕೊಳ್ಳಿ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.