ಮಂಡ್ಯ: ಸರ್ಕಾರದ ಆದೇಶದ ಮೇರೆಗೆ 7ನೇ ಆರ್ಥಿಕ ಗಣತಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬುಧವಾರ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಅವರು, ಗಣತಿಯಲ್ಲಿ ಮನೆ ಹಾಗೂ ವಾಣಿಜ್ಯ ಕಟ್ಟಡ, ಸಂಕೀರ್ಣಗಳಲ್ಲಿ ನಡೆಯುತ್ತಿರುವ ವ್ಯಾಪಾರ, ಉದ್ಯಮದ ಬಗ್ಗೆ ಮಾಹಿತಿಯನ್ನು ಗಣತಿದಾರರು ಕೇಳಲಿದ್ದಾರೆ. ಗಣತಿದಾರರಿಗೆ ಎಲ್ಲ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಹೈನುಗಾರಿಕೆ, ಹೊಲಿಗೆ, ಅಂಗಡಿ ಇತರ ಸಣ್ಣಪುಟ್ಟ ವ್ಯಾಪಾರ ಗಣತಿಯೊಂದಿಗೆ ವಾಣಿಜ್ಯ ಕಟ್ಟಡಗಳಲ್ಲಿನ ಉದ್ಯಮಗಳ ಬಗ್ಗೆ ಮಾಹಿತಿ ಕಲೆಹಾಕಲಿದ್ದು, ಈ ಮಾಹಿತಿ ಆಧರಿಸಿ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಗಳ ಮೂಲಕ ನಿರ್ದಿಷ್ಟ ಉದ್ಯಮಗಳಿಗೆ ನೀಡಬೇಕಾದ ಸೌಲಭ್ಯ, ಸಹಕಾರಗಳ ಬಗ್ಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ. ಆದ್ದರಿಂದ ಯಾರೂ ಆತಂಕ ಪಡದೆ ಸರಿಯಾದ ಮಾಹಿತಿ ನೀಡಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಧನುಷ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಶಿವಮ್ಮ ಇದ್ದರು.