ನವದೆಹಲಿ: ಮಹತ್ವದ ಬೆಳವಣಿಗೆ ಒಂದರಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ಹಾಗೂ ಅಕ್ರಮ ಹಣಕಾಸು ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹುರಿಯತ್ ನಾಯಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದೆ.
ಬಂಧಿತರನ್ನು ಜಮ್ಮು-ಕಾಶ್ಮೀರದ ಶ್ರೀನಗರ ಮೂಲದ ಮೊಹಮ್ಮದ್ ಅಕ್ಬರ್ ಭಟ್, ಫಾತಿಮಾ ಷಾ, ಅನಂತ್ ನಾಗ್ ಜಿಲ್ಲೆಯ ಸಬ್ಜರ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಫೆಬ್ರವರಿ 20ರವರೆಗೆ ಕಸ್ಟಡಿಯಲ್ಲಿರಿಸಿಕೊಳ್ಳಲು ನ್ಯಾಯಾಲಯ ಅನುಮತಿಸಿದೆ.
ಇದನ್ನೂ ಓದಿ: ಊರುಗೋಲಿನ ಸಹಾಯದಲ್ಲಿ ಹೃತಿಕ್ ರೋಷನ್; ಅಷ್ಟಕ್ಕೂ ಆಗಿದ್ದಾದರು ಏನು?
ಬಂಧಿತ ಆರೋಪಿಗಳು ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ಪೂರೈಸುತ್ತಿದ್ದರು ಮತ್ತು ಜಮ್ಮು–ಕಾಶ್ಮೀರ ವಿದ್ಯಾರ್ಥಿಗಳಿಗೆ ಪಾಕಿಸ್ತಾನದ ಕಾಲೇಜುಗಳಲ್ಲಿ ವೈದ್ಯಕೀಯ ಸೀಟುಗಳನ್ನು ಕೊಡಿಸುತ್ತಿದ್ದರು ಎಂದು ತಿಳಿದು ಬಂದಿದೆ. ತಮ್ಮ ವೈಯಕ್ತಿಕ ಖಾತೆಗಳಿಗೆ ಮತ್ತು ಅಲ್–ಜಬರ್ ಟ್ರಸ್ಟ್ನ ಖಾತೆಗೆ ಹಣ ಜಮಾ ಮಾಡಿಸಿಕೊಳ್ಳುತ್ತಿದ್ದ ಬಂಧಿತ ಆರೋಪಿಗಳು, ಆ ಹಣವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸುತ್ತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಈ ಹಿನ್ನಲೆಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ನಿಬಂಧನೆಗಳ ಅಡಿಯಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.