ಶಿವಮೊಗ್ಗ: ಕಳೆದ 20 ದಿನಗಳಿಂದ ಸುರಿದ ಮಳೆಗೆ ನಗರದಲ್ಲಿ 8 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. 22 ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಸಂಪೂರ್ಣವಾಗಿ ನೆಲಕ್ಕುರಳಿದ ಮನೆಗಳ ಮಾಲೀಕರಿಗೆ ಐದು ಲಕ್ಷ ರೂ. ಪರಿಹಾರವನ್ನು ವಿವಿಧ ಹಂತಗಳಲ್ಲಿ ನೀಡಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಬುಧವಾರ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರದಲ್ಲಿ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಈ ಹಿಂದೆ 95 ಸಾವಿರ ರೂ. ಪರಿಹಾರ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಇದೇ ಮೊದಲ ಬಾರಿಗೆ ಪರಿಹಾರ ಮೊತ್ತವನ್ನು ಐದು ಲಕ್ಷ ರೂ.ಗೆ ಏರಿಸಿದೆ. ಶಿವಮೊಗ್ಗ ನಗರದಲ್ಲಿ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಮೂರು ಲಕ್ಷ ರೂ.ಗೆ ಕಡಿಮೆ ಇಲ್ಲದಂತೆ ಪರಿಹಾರ ನೀಡಲಾಗುವುದು ಎಂದರು.