ಶಿವಮೊಗ್ಗ: ಇದು ಹಿಂದುಸ್ತಾನ. ಭಾರತೀಯ ಸಂಸ್ಕೃತಿಗೆ ಒತ್ತು ನೀಡುವ ಎಲ್ಲ ಕಾರ್ಯಕ್ರಗಳನ್ನೂ ನಾವು ಆಚರಿಸುತ್ತೇವೆ. ಅದಕ್ಕೆ ಯಾರ ಅಪ್ಪಣೆಯೂ ಬೇಡ. ಗಣೇಶ ಹಬ್ಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರೃ ಹೋರಾಟಗಾರ ಸಾವರ್ಕರ್ ಭಾವಚಿತ್ರವನ್ನು ಕೆಲವು ಕಿಡಿಗೇಡಿಗಳು ಹರಿದು ಹಾಕಿದ್ದರಿಂದ ಮತ್ತು ಹಿಂದು ಯುವಕನಿಗೆ ಚೂರಿ ಇರಿದ ಕಾರಣ ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
ಮುನ್ನೆಚ್ಚರಿಕೆ ಕ್ರಮವಾಗಿ ಆ.23 ರವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಆದರೆ ಯಾರಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸಭೆ, ಸಮಾರಂಭಗಳಿಗೆ ಮಾತ್ರ ನಿಷೇಧಾಜ್ಞೆ ಅನ್ವಯವಾಗುತ್ತದೆ. ಶಾಲಾ, ಕಾಲೇಜುಗಳು ಮತ್ತು ವ್ಯಾಪಾರ ವಹಿವಾಟಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ನನ್ನ ಸಹಮತವಿದೆ ಎಂದರು.