ಕುರುಗೋಡು: ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗಕ್ಕಾಗಿ ಬಳ್ಳಾರಿಗೆ ಹೋಗಬೇಕಿದೆ. ಹೀಗಾಗಿ ಸಚಿವ ಎಂ.ಸಿ.ಸುಧಾಕರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರ ಕಾಲೇಜು ಆರಂಭಕ್ಕೆ ಪ್ರಯತ್ನಿಸುವೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಇದನ್ನೂ ಓದಿ:ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ
ಪಟ್ಟಣದ ಬಾದನಹಟ್ಟಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಕುರುಗೋಡು ಸಿರಿ ವಾರ್ಷಿಕ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಸ್ಸಿ, ಎಸ್ಟಿ ಮತ್ತು ಒಬಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹಾಗೂ ತಾಲೂಕಿನ ಬೈಲೂರು ಗ್ರಾಮದಲ್ಲಿ 22 ಎಕರೆ ಪ್ರದೇಶದಲ್ಲಿ ಇಂಜಿನಿಯರಿಂಗ್ ಕಾಲೇಜು ಆರಂಭಿಸುವ ಜತೆಗೆ ಸಾರಿಗೆ ಸಮಸ್ಯೆ ಪರಿಹಾರಕ್ಕೆ ಡಿಎಂಎಫ್ ಅನುದಾನದಲ್ಲಿ 40 ಬಸ್ ಖರೀದಿಗೆ ಚರ್ಚಿಸಲಾಗಿದೆ ಎಂದರು.
ಮುಖ್ಯಶಿಕ್ಷಕ ಡಾ.ರಾಮಕೃಷ್ಣ ಮಾತನಾಡಿ, ಕಾಲೇಜಿನಲ್ಲಿ ವಿವಿಧ ಕೋರ್ಸ್ಗಳಿದ್ದು, ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮ ಹಾಗೂ ನೂತನ ಕೋರ್ಸ್ಗಳನ್ನು ಆರಂಭಿಸಲಾಗುವುದು. ಆದರೆ, ವಿದ್ಯಾರ್ಥಿಗಳಿಗೆ ತಾಲೂಕಿನಲ್ಲಿ ಮೆಟ್ರಿಕ್ ಹಾಸ್ಟೆಲ್ ವ್ಯವಸ್ಥೆ ಇಲ್ಲದ ಕಾರಣ ವಸತಿ ಸಮಸ್ಯೆಯಾಗುತ್ತಿದೆ. ಆದ್ದರಿಂದ ಶಾಸಕರು ಅಗತ್ಯ ಸೌಲಭ್ಯ ಕಲ್ಪಿಸಿದರೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದಂತಾಗುತ್ತದೆ ಎಂದು ಹೇಳಿದರು. ಶಿಕ್ಷಣ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪುರಸಭೆ ಅಧ್ಯಕ್ಷ ಶೇಖಣ್ಣ, ಸದಸ್ಯರಾದ ಓಂಕಾರಪ್ಪ, ಅಂಜಿನಪ್ಪ, ನಾಗಭೂಷಣ, ಯುವರಾಜ, ಮಂಜುನಾಥ, ಪ್ರಮುಖರಾದ ಬಂಗಿ ಮಲ್ಲಯ್ಯ, ಶಶಿಗೌಡ, ವಿ.ಬಸವರಾಜ, ಬಿ.ಎಂ.ಸೋಮಪ್ಪ ಇತರರಿದ್ದರು.