ಯಶವಂತಪುರ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಗೇರಿ ವಾರ್ಡ್ನಲ್ಲಿರುವ ಬಾಬಾಸಾಬರಪಾಳ್ಯ, ಬಸವೇಶ್ವರನಗರ ಹಾಗೂ ಬಿಡಿಎ ಅಪಾರ್ಟ್ಮೆಂಟ್ಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಲಾಗಿತ್ತು.
ಬಳಿಕ ಈ ರಸ್ತೆಗೆ ಮರು ಸಂಪರ್ಕ ಕಲ್ಪಿಸಿಲ್ಲ. ಇದರಿಂದ ಸ್ಥಳಿಯರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಶಾಲಾಮಕ್ಕಳು ಸಂಕಷ್ಟ ಅನುಭವಿಸುವಂತಾಗಿದೆ. ಸಾಕಷ್ಟು ಬಾರಿ ಈ ಬಗ್ಗೆ ಅಹವಾಲು ಸಲ್ಲಿಸಿದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಪಾಲಿಕೆಯ ಸ್ಥಳಿಯ ಅಧಿಕಾರಿಗಳು ಇತ್ತ ಗಮನಹರಿಸಿಲ್ಲವಾದ್ದರಿಂದ ಅಂದಾಜು 5 ಸಾವಿರ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದಾರೆ.
ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರು ಸೇರಿ ಗುರುವಾರ ಊರಿನ ಮುಖ್ಯದ್ವಾರದಲ್ಲಿ ಪೋಸ್ಟರ್ ಅಳವಡಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಜೀವ ಕೈಯಲ್ಲಿ ಹಿಡಿದುಕೊಂಡೇ ಮುಖ್ಯರಸ್ತೆ ದಾಟಬೇಕಾಗಿದೆ. ಸಂಬಂಧಪಟ್ಟವರು ಈಗಲಾದರೂ ಕೂಡಲೇ ಸಮಸ್ಯೆ ಬಗೆಹರಿಸಿ, ಸಿಗ್ನಲ್ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ.