ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯತ್ವದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹಗೊಂಡಿದ್ದು ಅವರು ಪ್ರತಿನಿಧಿಸುವ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗದ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಆಯೋಗ ಹೇಳಿದೆ.
ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೂ ಕಾಯುತ್ತೇವೆ ಆ ನಂತರ ಆಯೋಗ ತನ್ನ ನಿರ್ಧಾರವನ್ನ ತಿಳಿಸಲಿದೆ ಎಂದು ಹೇಳಿದ್ದಾರೆ.
ವಯನಾಡು ಲೋಕಸಭೆ ಕ್ಷೇತ್ರ ತೆರವಾಗಿರುವ ಬಗ್ಗೆ ಮಾರ್ಚ್ 23ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಕಾನೂನಿನ ಪ್ರಕಾರ ಸ್ಥಾನ ತೆರವಾದ ಆರು ತಿಂಗಳೊಳಗೆ ಉಪಚುನಾವಣೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ
ಹಾಲಿ ಸದಸ್ಯರ ಅವಧಿಯೂ ಒಂದು ವರ್ಷಕ್ಕಿಂತ ಕಡಿಮೆ ಇದ್ದರೆ ಉಪಚುನಾವಣೆ ನಡೆಸುವಂತಿಲ್ಲ. ಆದರೆ, ವಯನಾಡ್ ಲೋಕಸಭೆ ಸದಸ್ಯರ ಅವಧಿಯೂ ಇನ್ನು ಒಂದು ವರ್ಷಕ್ಕಿಂತ ಹೆಚ್ಚಿರುವ ಕಾರಣ ನ್ಯಾಯಾಲಯದ ಮುಂದಿನ ಆದೇಶವನ್ನು ಗಮನದಲ್ಲಿಟ್ಟುಕೊಂಡು ಉಪಚುನಾವಣೆ ಘೋಷಿಸಲಾಗುವುದು ಎಂದು ಮುಖ್ಯ ಚುನಾವಣಾ ಅಧಿಕಾರಿ ರಾಜೀವ್ ಕುಮಾರ್ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಆವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಲೋಕಸಭೆ ಕಾರ್ಯದರ್ಶಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ ಬೆನ್ನಲ್ಲೇ ವಯನಾಡು ಲೋಸಭೆ ಕ್ಷೇತ್ರ ತೆರವಾಗಿದೆ.