ಕೊಡಗು:ಆನೆ ಸೆರೆ ಕಾರ್ಯಾಚರಣೆ ವೇಳೆ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.
ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆಗಳು ನಾಶ ಮಾಡುತ್ತಿದ್ದವು, ಕಾಡಾನೆಗಳ ಹಾವಳಿಯಿಂದಾಗಿ ಇಲ್ಲಿನ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಸರ್ಕಾರ ಈ ಆನೆಗಳನ್ನು ಸೆರೆ ಹಿಡಿಯಲು ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದೆ.
ಈ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಕಾರ್ಯಾಚರಣೆ ವೇಳೆ ಆನೆ ಸಾವನ್ನಪ್ಪಿದೆ. ಆನೆಗೆ ಹೃದಯಾಘಾತವಾಗಿ ಸಾವನ್ನಪ್ಪಿದೆ ಎಂದು ಶಂಕಿಸಲಾಗಿದೆ.
ಒಟ್ಟು ನಾಲ್ಕು ಕಾಡಾನೆಗಳ ಸೆರೆಗೆ ಸರ್ಕಾರ ಆದೇಶಿಸಿದ್ದು, ಈ ಪೈಕಿ ಒಂದು ಆನೆಯನ್ನು ಸೆರೆ ಹಿಡಿಯಲಾಗಿದೆ. ಅರವಳಿಕೆ ನೀಡಿದ ಕೆಲವೇ ಸಮಯದಲ್ಲಿ ಆನೆ ಸಾವನ್ನಪ್ಪಿದೆ. ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)