More

    ಹೋರಾಟಗಾರರ ಆದರ್ಶ ಮೈಗೂಡಿಸಿಕೊಳ್ಳಿ

    ಸೋಮವಾರಪೇಟೆ: ಕರ್ನಾಟಕ ಏಕೀಕರಣಕ್ಕಾಗಿ ಸುದೀರ್ಘ ಹೋರಾಟ ಮಾಡಿದ ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಮತ್ತು ಪತ್ರಕರ್ತರನ್ನು ನೆನಸಿಕೊಂಡು ಅವರ ಆದರ್ಶಗಳನ್ನು ಕನ್ನಡ ಮನಸ್ಸು ಮೈಗೂಡಿಸಿಕೊಳ್ಳಬೇಕು ಎಂದು ಕನ್ನಡ ಸಿರಿ ಬಳಗದ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಕಿವಿಮಾತು ಹೇಳಿದರು.

    ಕರ್ನಾಟಕ ಸುವರ್ಣ ಸಂಭ್ರಮ-2023 ಪ್ರಯುಕ್ತ ಸೋಮವಾರಪೇಟೆ ಸೃಷ್ಟಿಯ ಚಿಗುರು ಕವಿಬಳಗ, ವಿದ್ಯಾ ನರ್ಸಿಂಗ್ ತರಬೇತಿ ಸಂಸ್ಥೆ ವತಿಯಿಂದ ಶನಿವಾರ ಸಂಜೆ ಇಲ್ಲಿನ ಮಾನಸಹಾಲ್‌ನಲ್ಲಿ ಆಯೋಜಿಸಿದ್ದ ಗೀತಗಾಯನ ಮತ್ತು ಕವಿಗೋಷ್ಠಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕನ್ನಡ ನಮಗೆ ಇಂದು ಅನ್ನ ಕೊಡುತ್ತಿರುವ ಭಾಷೆಯಾಗಿದೆ. ಕನ್ನಡ ಭಾಷಿಕರನ್ನು ಒಗ್ಗೂಡಿಸಿ ಕನ್ನಡ ನಾಡಿಗಾಗಿ ಸುದೀರ್ಘ ಹೋರಾಟ ನಡೆದಿದೆ. ಇದರಲ್ಲಿ ಅನೇಕರು ಪ್ರಾಣತ್ಯಾಗ ಮಾಡಿದ್ದಾರೆ. ಕನ್ನಡನಾಡು, ಭಾಷೆಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಕನ್ನಡಿಗರ ಮೇಲಿದೆ ಎಂದು ಹೇಳಿದರು.

    1950ರಲ್ಲಿ ಭಾರತವು ಗಣರಾಜ್ಯವಾಯಿತು. ನಂತರ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳು ರಚನೆಯಾದವು. ಇದು ಮೈಸೂರು ರಾಜ್ಯಕ್ಕೆ ಜನ್ಮ ನೀಡಿತು. 1973 ನ.1ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು. ಅಂದಿನ ಮುಖ್ಯಮಂತ್ರಿ ದೇವರಾಜು ಅರಸು ಅವರು ಗಟ್ಟಿ ನಿರ್ಧಾರ ತೆಗೆದುಕೊಂಡರು. ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಸಾಹಿತಿಗಳಾದ ಕುವೆಂಪು, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಕೆ.ಶಿವರಾಮ್ ಕಾರಂತ್, ಎ.ಎನ್.ಕೃಷ್ಣರಾವ್, ಬಿ.ಎಂ.ಶ್ರೀಕಂಠಯ್ಯ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜ್ಯೋತ್ಸವ ದಿನವನ್ನು ಕನ್ನಡ ಹಬ್ಬವೆಂದೇ ನಾವೆಲ್ಲರೂ ಆಚರಿಸುತ್ತಿದ್ದೇವೆ. ಕನ್ನಡ ಮಾತನಾಡುವ ಮೂಲಕ ಕನ್ನಡವನ್ನು ಬೆಳೆಸೋಣ ಎಂದು ಹೇಳಿದರು.

    ಕುಶಾಲನಗರ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕನ್ನಡ ಮನಸ್ಸುಗಳು ಹೆಚ್ಚಿದ್ದಾರೆ. ಕನ್ನಡ ಮಾತನಾಡುವ ಮೂಲಕ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ತೆರೆಮರೆಯಲ್ಲೇ ಮಾಡುತ್ತಿದ್ದಾರೆ. ಕನ್ನಡ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸುವ ಮೂಲಕ ಸಾಹಿತ್ಯ ಕೃಷಿಯನ್ನು ಮಾಡಬೇಕಿದೆ ಎಂದು ಹೇಳಿದರು.

    ವಿದ್ಯಾರ್ಥಿ ಜೀವನದಿಂದಲೇ ಕನ್ನಡ ಸಾಹಿತ್ಯ, ಪರಂಪರೆಯ ಬಗ್ಗೆ ಓದಿ ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಎನ್.ದೀಪಕ್, ಕವಯಿತ್ರಿ ಬಿ.ಪಿ.ಸುಮತಿ ಅವರನ್ನು ಸನ್ಮಾನಿಸಲಾಯಿತು.

    ಕವಿಬಳಗದ ಅಧ್ಯಕ್ಷ ನ.ಲ.ವಿಜಯ, ನರ್ಸಿಂಗ್ ತರಬೇತಿ ಕೇಂದ್ರದ ಪ್ರಾಂಶುಪಾಲ ಟಿ.ಎಚ್.ಆಲೀಮಾ, ವ್ಯವಸ್ಥಾಪಕ ಕೆ.ಇ.ಸುಲೈಮಾನ್, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಚ್.ಜೆ.ಜವರಪ್ಪ ಇದ್ದರು. ಪ್ರಾರಂಭದಲ್ಲಿ ಭುವನೇಶ್ವರಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಕವಿಬಳಗ ಸದಸ್ಯರು ಪಾರಿವಾಳಗಳನ್ನು ಹಾರಿಬಿಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts