More

    ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ

    ಮೈಸೂರು: ಮೈಸೂರು ಹಾಗೂ ಸುತ್ತಮುತ್ತಲಿನ ಸ್ಥಾಪನೆಗೊಂಡಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕಿತು ಮಾಡಿದರು.


    ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಉದ್ದಿಮೆದಾರರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರವು ಕೈಗಾರಿಕೆಗಳಿಗೆ ಜಮೀನು, ನೀರು, ವಿದ್ಯುತ್ ಎಲ್ಲವನ್ನೂ ರಿಯಾಯಿತಿ ದರದಲ್ಲಿ ನೀಡಿ ಪರವಾನಗಿ ನೀಡುತ್ತದೆ. ಈ ಸಂದರ್ಭದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಷರತ್ತನ್ನೂ ವಿಧಿಸಿರುತ್ತದೆ. ಇದು ಪಾಲನೆ ಆಗಬೇಕು. ಎಲ್ಲ ಕೈಗಾರಿಕೆಗಳು, ಉದ್ದಿಮೆದಾರರು ಕಡ್ಡಾಯವಾಗಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದರು.


    ಸ್ಥಳೀಯರಿಗೆ ಉದ್ಯೋಗ ನೀಡುವುದು ನಿಮ್ಮ ಕರ್ತವ್ಯ, ಕೈಗಾರಿಕೆಗಳಿಗೆ ಭೂಮಿ ಕಳೆದುಕೊಂಡಿರುವವರಿಗೆ ಶಾಶ್ವತ ಉದ್ಯೋಗ ನೀಡಬೇಕು. ಅವರಿಗೆ ಯಾವುದೇ ಕಾರಣಕ್ಕೂ ಬಾಹ್ಯ ಗುತ್ತಿಗೆ ಅಥವಾ ತಾತ್ಕಾಲಿಕ ಉದ್ಯೋಗ ನೀಡಬಾರದು.

    ಈ ಮೂಲಕ ಸರ್ಕಾರದ ಉದ್ದೇಶ ಈಡೇರಿಸಬೇಕು ಎಂದರು.
    ಹಲವರು ಉದ್ಯೋಗ ನೀಡಿದ್ದೀರಿ, ಕೆಲ ಕಂಪನಿಗಳಲ್ಲಿ ಉದ್ಯೋಗ ನೀಡಿಲ್ಲ ಎಂದು ಸ್ಥಳೀಯರು ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಹಲವರು ಉದ್ಯೋಗ ನೀಡಲು ಒಪ್ಪಿಗೆ ನೀಡಿದ್ದೀರಿ. ಯಾರು ಉದ್ಯೋಗ ನೀಡಿಲ್ಲವೋ ಅವರು ಈ ತಿಂಗಳೊಳಗಾಗಿ ಉದ್ಯೋಗ ನೀಡಬೇಕು ಎಂದು ನಿರ್ದೇಶಿಸಿದರು.


    ನಂಜನಗೂಡು, ಚಾಮುಂಡೇಶ್ವರಿ, ವರುಣ ಕ್ಷೇತ್ರ ಹಾಗೂ ಹಿಮ್ಮಾವು ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿಲ್ಲ ಎಂಬ ದೂರುಗಳಿವೆ. ಆದ್ದರಿಂದ ಸಂಬಂಧಪಟ್ಟ ಕೈಗಾರಿಕೆಗಳು ತಕ್ಷಣ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.


    ತಾಂತ್ರಿಕ ನೈಪುಣ್ಯತೆಯುಳ್ಳ ಕಾರ್ಮಿಕರು ಸ್ಥಳೀಯವಾಗಿ ಲಭ್ಯವಿಲ್ಲದಿದ್ದರೆ ಮಾತ್ರ ಹೊರಗಿನವರನ್ನು ತೆಗೆದುಕೊಳ್ಳಬೇಕು. ಸ್ಥಳೀಯರಿಗೆ ತರಬೇತಿ ನೀಡುವ ಮೂಲಕ ತಾಂತ್ರಿಕ ಪರಿಣತರನ್ನಾಗಿಸಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಎಚ್ಚರಿಸಿದರು.


    ನಮ್ಮಲ್ಲಿ ಮಾನವ ಸಂಪನ್ಮೂಲಕ್ಕೆ ಕೊರತೆ ಇಲ್ಲ. ಐಟಿಐ, ಡಿಪ್ಲೊಮಾ, ಪದವಿ ಪಡೆದಿರುವವರು ಸಾಕಷ್ಟು ಸಂಖ್ಯೆಯಲ್ಲಿದ್ದು ಸರ್ಕಾರದಿಂದ ಕೌಶಲ ತರಬೇತಿ ನೀಡಿ ಪರಿಣಿತರನ್ನಾಗಿಸುತ್ತಿದೆ. ಇದರೊಂದಿಗೆ ಕಂಪನಿಗಳು ಸಹ ಕಾರ್ಮಿಕರಿಗೆ ತರಬೇತಿ ನೀಡಬೇಕು ಎಂದರು.


    ಕೆಲವು ಕಾರ್ಖಾನೆಗಳಲ್ಲಿ ಕಾರ್ಮಿಕ ಸಂಘಗಳನ್ನು ಹತ್ತಿಕ್ಕುವ ಕೆಲಸವಾಗಿದೆ. ಇಲ್ಲವೇ ಬೇರೊಂದು ಕಾರ್ಮಿಕ ಸಂಘ ಹುಟ್ಟು ಹಾಕಲಾಗುತ್ತದೆ ಎಂಬ ದೂರುಗಳಿವೆ. ಯಾವುದೇ ಕಾರಣಕ್ಕೂ ಹೀಗೆ ಆಗಬಾರದು. ಸಂಘ ಕಟ್ಟಿಕೊಳ್ಳುವುದು ಕಾರ್ಮಿಕರ ಸಾಂವಿಧಾನಿಕ ಹಕ್ಕು. ಉದ್ದೇಶಪೂರ್ವಕವಾಗಿ ತೊಂದರೆ ಮಾಡಿದರೆ ಕಾರ್ಮಿಕ ಇಲಾಖೆಯಿಂದ ತಾವು ನ್ಯಾಯ ಪಡೆಯಬಹುದು ಎಂದರು.


    ರಾಜ್ಯ, ರಾಷ್ಟ್ರ ಮುಂದುವರಿಯಬೇಕಾದರೆ ಕೃಷಿಯ ನಂತರದ ಸ್ಥಾನ ಕೈಗಾರಿಕೆ ಪಾತ್ರ ಇದೆ. ಸರ್ಕಾರ, ಕಾರ್ಖಾನೆ, ಕಾರ್ಮಿಕರು ಸೇರಿ ಕಾರ್ಯನಿರ್ವಹಿಸಿದರೆ ರಾಜ್ಯದ ಜಿಡಿಪಿ ಬೆಳವಣಿಗೆ ಆಗುತ್ತದೆ. ಹೀಗಾಗಿ ಕೈಗಾರಿಕೆಗಳ ಬೆಳವಣಿಗೆಗೆ ಒತ್ತು ನೀಡಬೇಕಾಗಿದೆ ಎಂದರು.
    ನಮ್ಮ ಸರ್ಕಾರ ಕೈಗಾರಿಕೆಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ ಎಂದು ಹೇಳಿದರು.


    ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ, ಆಶ್ರಯ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಮಟ್ಟ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಇತರರಿದ್ದರು.

    *ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಆ ಮೂಲಕ ನಿರುದ್ಯೋಗಿಗಳಿಗೆ 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಜನವರಿ 12ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts