ಕೆ.ಆರ್.ನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಮರ್ಥ ಜೀವನ ನಿರ್ವಹಣೆಗೆ ಶಿಕ್ಷಣ ಬಹಳ ಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ತಾಲೂಕು ಯೋಜನಾಧಿಕಾರಿ ರಮೇಶ್ ಹೇಳಿದರು.
ಪಟ್ಟಣದ ಲಯನ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳೇ ಈ ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಮಕ್ಕಳು ಶಿಕ್ಷಣ, ಆರೋಗ್ಯದ ಜತೆಗೆ ಪಠ್ಯದೊಂದಿಗೆ ಕ್ರೀಡೆ ಮತ್ತು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಲಯನ್ಸ್ ವಿದ್ಯಾಸಂಸ್ಥೆ ಅಧ್ಯಕ್ಷ ಬುದ್ದಿಸಾಗರ್ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆ ಅವರ ಸಮಾಜ ಸೇವಾ ಕಾರ್ಯ ಅನುಕರಣೀಯವಾದದ್ದು. ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನ ಪಡೆದು ಇಂತಹ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ದಾನಿಗಳಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಮೇಶ್, ಸೂರ್ಯ ಸ್ಮಾಟ್ ಸಿಟಿ ಪಾಲುದಾರ ಸಿ.ಎಲ್.ರವೀಶ್ ಅವರನ್ನು ಅಭಿನಂದಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಕೆ.ಸಿ.ಲೋಕೇಶ್, ಖಜಾಂಚಿ ಎಚ್.ಸಿ.ಮಹದೇವಯ್ಯ, ಆಡಳಿತಾಧಿಕಾರಿ ಎಸ್.ಸದಾಶಿವ, ನಿರ್ದೇಶಕರಾದ ಕೆ.ಆರ್.ಸತ್ಯಕುಮಾರ್, ಲಯನ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಟಿ.ಪಿ.ನಂದೀಶ್ಕುಮಾರ್, ಲಯನ್ಸ್ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಎಲ್.ಎಸ್.ಲೋಕೇಶ್, ಜಿ.ರಮೇಶ್, ಶಿಕ್ಷಕರಾದ ಎಚ್.ಎನ್.ದಿವಾಕರ್, ನಳಿನ, ಸತ್ಯವತಿ, ಸುಜಾತಾ, ಗಾಯತ್ರಿ, ಆಶಾ, ನಂದಿನಿ, ಪಾರ್ವತಿ ಇತರರಿದ್ದರು.