ಗಂಗಾವತಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಎಸ್ಯುಸಿಐ (ಕಮ್ಯೂನಿಸ್ಟ್) ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಯು.ನಾಗರಾಜ್ಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಶರಣು ಗಡ್ಡಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಮತ್ತು ಸಿಲಿಂಡರ್ ದರ ಹೆಚ್ಚುತ್ತಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ. ಇದರಿಂದ ದೈನಂದಿನ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ದೈನಂದಿನ ಬಳಕೆ ವಸ್ತುಗಳ ಮೇಲಿನ ತೆರಿಗೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ಹೆಚ್ಚಿಸಿ, ಪ್ರತಿ ತಿಂಗಳ ಮೊದಲ ವಾರದಲ್ಲಿ ವಿತರಣೆಯಾಗುವಂತೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು. ಪದಾಧಿಕಾರಿಗಳಾದ ಶರಣು ಪಾಟೀಲ್, ಗಂಗರಾಜ್ ಅಳ್ಳಳ್ಳಿ, ರಮೇಶ ವಕ್ಕಲಕುಂಟೆ, ಶರಣಪ್ಪ ಉದ್ಬಾಳ್, ದ್ಯಾವಮ್ಮ, ಮಲ್ಲಮ್ಮ, ಆಶಾಬೇಗಂ, ಮಹ್ಮದ್ ಯಾಜ್ ಇತರರಿದ್ದರು.