ಬಳ್ಳಾರಿ: ಮುಂದಿನ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಎಲ್ಲ ಶಾಲೆಗಳ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಶ್ರಮಿಸಲು ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಹೇಳಿದರು.
ನಿರಂತರ ಅಭ್ಯಾಸ ಆತ್ಮವಿಶ್ವಾಸದಿಂದ ಗುರಿ ತಲುಪಲು ಸಾಧ್ಯ
ನಗರದ ಜಿಪಂ ನಜೀರ್ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಫಲಿತಾಂಶ ಸುಧಾರಣೆಗೆ ಏಕರೂಪದ ವಾರ್ಷಿಕ ಕ್ರಿಯಾಯೋಜನೆ, ವರ್ಕ್ಬುಕ್ ಸಿದ್ಧತೆ, ಮಾಸಿಕ ಎರಡು ಯೂನಿಟ್ ಟೆಸ್ಟ್, ಮಾದರಿ ಪ್ರಶ್ನೆ ಪತ್ರಿಕೆ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮ, ಶ್ರದ್ಧೆ, ಆತ್ಮವಿಶ್ವಾಸದಿಂದ ಮಾತ್ರ ನಿಗದಿತ ಗುರಿ ತಲುಪಲು ಸಾಧ್ಯ ಎಂದರು.
ಇದನ್ನೂ ಓದಿ: ಗುರು-ಶಿಷ್ಯರ ಶ್ರಮ, ಕೋಟೆನಾಡು ಪ್ರಥಮ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಶೈಕ್ಷಣಿಕ ದಾಖಲೆ
ಡಿಡಿಪಿಐ ಅಂದಾನಪ್ಪ ವಡಗೇರಿ ಮಾತನಾಡಿದರು. ಜಿಲ್ಲೆಯಲ್ಲಿ ಶೇ.100 ಫಲಿತಾಂಶ ಪಡೆದ ಸರ್ಕಾರಿ ಪ್ರೌಢಶಾಲೆಗಳ ಮುಖ್ಯಶಿಕ್ಷಕರನ್ನು ಸನ್ಮಾನಿಸಲಾಯಿತು. ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ಶಾಲೆಗಳಲ್ಲಿನ ಆರು ವಿದ್ಯಾರ್ಥಿಗಳು, ಐದು ತಾಲೂಕುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ 20 ವಿದ್ಯಾರ್ಥಿಗಳು ಹಾಗೂ ಬಡತನ ಮಧ್ಯೆಯೂ ಕಷ್ಟ ಪಟ್ಟು ಅಭ್ಯಾಸ ಮಾಡಿ ಉತ್ತಮ ಅಂಕ ಪಡೆದ 12 ವಿದ್ಯಾರ್ಥಿಗಳು ಮತ್ತು ಬಾಲಮಂದಿರದ ನಾಲ್ವರನ್ನು ಸನ್ಮಾನಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯ ಸೂರಯ್ಯ ಬೇಗಂ, ಸತ್ಯನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕಿನ ನೋಡಲ್ ಅಧಿಕಾರಿಗಳು ಹಾಗೂ ಪಾಲಕರು ಇದ್ದರು.