More

    ಆರೋಗ್ಯ ಪೂರ್ಣ ಸಮಾಜಕ್ಕೆ ನೈತಿಕ ಮೌಲ್ಯಗಳು ಅಗತ್ಯ

    ಬಾಳೆಹೊನ್ನೂರು: ಸುಖ, ಶಾಂತಿದಾಯಕ ಬದುಕಿಗೆ ಧರ್ಮ ಮತ್ತು ಧರ್ಮಾಚರಣೆ ಮುಖ್ಯ. ಉತ್ತಮ ಸಮಾಜ ನಿರ್ಮಾಣಕ್ಕೆ ಶಾಸ್ತ್ರ ಮತ್ತು ಶಾಸ್ತ್ರದ ಭಯ ಇರಬೇಕಂತೆ. ಇವೆರಡನ್ನೂ ಮನುಷ್ಯ ಮೀರಿ ನಡೆಯುತ್ತಿರುವ ಕಾರಣ ಜೀವನದಲ್ಲಿ ಶಾಂತಿ ನೆಮ್ಮದಿಯಿಲ್ಲ. ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ನೈತಿಕ ಮೌಲ್ಯಗಳ ಸಂರಕ್ಷಣೆ ಅಗತ್ಯತೆ ಬಹಳಷ್ಟಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

    ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಸೋಮವಾರ ನಡೆದ ನೈತಿಕ ಮೌಲ್ಯಗಳ ಸಂರಕ್ಷಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಜಗದ್ಗುರುಗಳು ಆಶೀರ್ವಚನ ನೀಡಿದರು.
    ಮನುಷ್ಯ ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸದಿದ್ದರೆ ಜೀವನ ವ್ಯರ್ಥವಾಗುವುದು. ಜೀವನ ಹೂದೋಟದಲ್ಲಿ ಅರಳುವ ಹೂಗಳೆಷ್ಟೋ, ಬಾಡುವ ಜೀವಗಳು ಎಷ್ಟೋ ಹೇಳಲಾಗದು. ಅವರವರ ಬದುಕಿನಲ್ಲಿ ಅಳವಡಿಸಿಕೊಂಡ ನೀತಿ, ನಿಯತ್ತುಗಳೇ ಇದಕ್ಕೆ ಕಾರಣವಾಗುತ್ತವೆ. ಭೌತಿಕ ಬದುಕಿನ ಸಂಪನ್ಮೂಲಗಳಾಗಲಿ, ಸಿರಿ ಸಂಪತ್ತಿನ ಸಂಗ್ರಹವಾಗಲಿ ಮಾನವನಿಗೆ ಸಂತೃಪ್ತಿ ತಂದು ಕೊಡಲಾರವು. ಇದರೊಂದಿಗೆ ಒಂದಿಷ್ಟಾದರೂ ಆಧ್ಯಾತ್ಮ ಚಿಂತನೆ ಇರಬೇಕಾಗುತ್ತದೆ ಎಂದು ತಿಳಿಸಿದರು.
    ಇಂದು ಎಲ್ಲೆಡೆ ಶಾಂತಿಗಾಗಿ ಹುಡುಕಾಟ ನಡೆದಿದೆ. ಆದರೆ ಕಳೆದು ಹೋದ ಸ್ಥಾನದಲ್ಲಿಲ್ಲ. ಬೇರೆಲ್ಲಿಯೋ ಅನ್ವೇಷಣೆ ನಡೆಯುತ್ತಿದೆ. ಮಂತ್ರ, ತೀರ್ಥ, ಗುರು, ದೈವ ಮತ್ತು ವೈದ್ಯರಲ್ಲಿ ಯಾವ ಭಾವನೆಗಳನ್ನು ಇಟ್ಟುಕೊಂಡು ನಡೆಯುತ್ತೇವೆಯೋ ಅದಕ್ಕೆ ತಕ್ಕ ಫಲಗಳನ್ನು ಮನುಷ್ಯ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ನೀತಿಯಿಲ್ಲದ ಶಿಕ್ಷಣ, ಭೀತಿ ಇಲ್ಲದ ಶಾಸನ, ಮಿತಿ ಇಲ್ಲದ ಜೀವನ, ಸೀಮಾತೀತವಾದ ಸ್ವಾತಂತ್ರ್ಯ ಇವು ರಾಷ್ಟ್ರ ವಿಘಾತಗಳೆಂದು ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ನಿರೂಪಿಸಿದ್ದನ್ನು ಯಾರೂ ಮರೆಯಲಾಗದು ಎಂದು ಹೇಳಿದರು.
    ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಹಮ್ಮಿಕೊಂಡ ಎಲ್ಲ ಕಾರ್ಯಗಳು ಅತ್ಯಂತ ಯಶಸ್ವಿಯಾಗಿ ನಡೆದಿರುವುದು ನಮಗೆ ಸಂತೋಷ ತಂದಿದೆ ಎಂದರು.
    ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಸ್ವಸ್ಥ ಸಮಾಜ ಕಟ್ಟಿ ಬೆಳೆಸಲು ನೈತಿಕ ನೀತಿ, ರೀತಿಗಳ ಪರಿಪಾಲನೆಯ ಅಗತ್ಯವಿದೆ. ಸಂಪತ್ತಿನ ಬದುಕಿನಲ್ಲಿ ಬಾಳುವ ಮನುಷ್ಯನಿಗೆ ಗುಣವಂತರು ಗುಣಾದರ್ಶಗಳು ಕಾಣಲಾರವು. ಅನ್ಯಾಯ, ಅಸತ್ಯ ಹೇಳುವ ಜನರು ಹೆಚ್ಚಿರುವಾಗ ಸತ್ಯವಂತರು ಸುಮ್ಮನಿರುವ ಕಾಲ ಬಂದಿದೆ. ಸರ್ವೋದಯದ ಬಾಳಿಗೆ ಸಂತ, ಮಹಾಂತರು ಶ್ರಮಿಸಿದ್ದಾರೆ. ಅನ್ನದಾನ, ವಿದ್ಯಾದಾನ ಮಾಡಿದ ಕೀರ್ತಿ ವೀರಶೈವ ಮಠಗಳಿಗೆ ಸಲ್ಲುತ್ತದೆ ಎಂದರು.
    ನೇತೃತ್ವ ವಹಿಸಿದ ಕವಲೇದುರ್ಗ ಭುವನಗಿರಿ ಸಂಸ್ಥಾನ ಮಠದ ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವೈಚಾರಿಕತೆಯ ಹೆಸರಿನಲ್ಲಿ ಸತ್ಯ, ಸಂಸ್ಕೃತಿ ಮತ್ತು ಪರಂಪರೆಗಳ ಬಗೆಗೆ ನಿರ್ಲಕ್ಷೃ ಮನೋಭಾವ ಹೆಚ್ಚುತ್ತಿದೆ. ಎಲ್ಲಿ ನೋಡಿದರಲ್ಲಿ ಮೋಸ, ವಂಚನೆ, ಕುಯುಕ್ತಿ ಜನರು ಹೆಚ್ಚುತ್ತಿರುವಾಗ ಸಾತ್ವಿಕರು ಮೌನ ವಹಿಸುವುದು ಅನಿವಾರ್ಯವಾಗಿದೆ. ಮಾತಿನಿಂದಲೇ ಸ್ವರ್ಗ ತೋರಿಸಬಲ್ಲೆ ಎಂದು ಹೇಳುವವರು ಇರುವಾಗ ಸಾಧನೆ, ಶ್ರಮ ವಹಿಸಿ ಕೆಲಸ ಮಾಡುವವರನ್ನು ಗುರುತಿಸುವವರು ಬಹಳ ವಿರಳರಾಗಿದ್ದಾರೆ. ಸಾತ್ವಿಕ, ತಾತ್ವಿಕ ಮೌಲ್ಯಾಧಾರಿತ ಚಿಂತನೆಗಳನ್ನು ಸಂರಕ್ಷಿಸುವ ಅವಶ್ಯಕತೆ ಬಹಳಷ್ಟಿದೆ ಎಂದರು.
    ಬೀರೂರು ಶ್ರೀಮದ್ ರಂಭಾಪುರಿ ಖಾಸಾ ಶಾಖಾ ಮಠದ ರುದ್ರಮುನಿ ಶಿವಾಚಾರ್ಯರು, ಚಂದ್ರಶೇಖರ ಶಿವಾಚಾರ್ಯರು, ಶಾಂತಮಲ್ಲ ಶಿವಾಚಾರ್ಯರು, ರೇವಣಸಿದ್ಧೇಶ್ವರ ಶಿವಾಚಾರ್ಯರು, ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಉಪದೇಶಾಮೃತ ನೀಡಿದರು.
    ಎಡೆಯೂರು ರೇಣುಕ ಶಿವಾಚಾರ್ಯರು, ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ಕೇದಾರ ಶಿವಶಾಂತವೀರ ಶಿವಾಚಾರ್ಯರು, ವೀರಸಂಗಮೇಶ್ವರ ಶಿವಾಚಾರ್ಯರು, ಗಂಗಾಧರ ಶಿವಾಚಾರ್ಯರು ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು.
    ಶಾಸಕ ಎಚ್.ಡಿ.ತಮ್ಮಯ್ಯ, ಮೈಸೂರು ಜಪದಕಟ್ಟಿಮಠದ ಡಾ. ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಗುರುಲಿಂಗಯ್ಯ ಹಿರೇಮಠ ಹಿತ್ತಲಶಿರೂರ ಪ್ರಾರ್ಥಿಸಿದರು. ಕನ್ನೂರು-ಸಿಂಧನೂರಿನ ಸೋಮನಾಥ ಶಿವಾಚಾರ್ಯರು ಸ್ವಾಗತಿಸಿದರು. ಗಿರಿಜಾ ಕಲ್ಲೋಳಿಮಠ ಮತ್ತು ಲಾವಣ್ಯ ಮಂಜುನಾಥ ನಿರೂಪಿಸಿದರು.
    ಶ್ರೀ ಪೀಠದಲ್ಲಿ ಬೆಳಗ್ಗೆ ವಸಂತೋತ್ಸವದ ಧಾರ್ಮಿಕ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ವಸಂತೋತ್ಸವ ಕಣ್ತುಂಬಿಕೊಂಡರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts