ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಚೈತ್ರಾ ಕುಂದಾಪುರ ಹಾಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸನವರಾಜ ಬೊಮ್ಮಾಯಿ ಚೈತ್ರಾ ಕುಂದಾಪುರ ಹಾಗೂ ಅವರ ವ್ಯವಹಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದ ಸಮಗ್ರ ತನಿಖೆ ಆಗಬೇಕಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರು ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: VIDEO| ಭಾರತ ಮೂಲದ ವ್ಯಕ್ತಿಯಿಂದ ಕೊರಿಯನ್ ಯುಟ್ಯೂಬರ್ಗೆ ಲೈಂಗಿಕ ಕಿರುಕುಳ
ಪ್ರಕರಣ ಸಂಬಂಧ ಸ್ವಾಮೀಜಿ ಅಷ್ಟೇ ಅಲ್ಲ ಯಾರೇ ಇದ್ದರೂ ಅವರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಬೇಕು. ಟಿಕೆಟ್ ಕೊಡಿಸುವುದಾಗಿ ವಂಚನೆ ಎಸಗಿರುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತೇವೆ.
ಹಲವರು ಹೋರಾಟ ಮಾಡುತ್ತಾರೆ. ಅವರಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿರುವುದಿಲ್ಲ. ಪ್ರಕರಣದ ಸಮಗ್ರ ತನಿಖೆಯಾಗಬೇಕಿದ್ದು, ಸತ್ಯಾಸತ್ಯತೆ ಹೊರಬರಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ಧಾರೆ.