ಆಂಧ್ರಪ್ರದೇಶ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ವೈಎಸ್ಆರ್ಸಿಪಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.
ಒಂದು ವಾರದ ಹಿಂದೆಯಷ್ಟೇ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ಅವರು ವೈಎಸ್ಆರ್ ( ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ ) ಪಕ್ಷ ಸೇರಿ ರಾಜಕೀಯ ಇನಿಂಗ್ಸ್ ಆರಂಭಿಸಿದ್ದ ರಾಯುಡು ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿರುವ ರಾಯುಡು ನಾನು ವೈಎಸ್ಆರ್ಸಿಪಿ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಅಲ್ಲದೆ ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ಬಯಸಿದ್ದೇನೆ. ನನ್ನ ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸುತ್ತೇನೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
ಅಂಬಾಟಿ ರಾಯುಡು ವೈಎಸ್ಆರ್ಸಿಪಿ ಪಕ್ಷವನ್ನು ತೊರೆಯುತ್ತೇನೆ ಎಂದು ಹೇಳಿದ ತಕ್ಷಣ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿ ದುಷ್ಟರ ಜೊತೆಯಲ್ಲಿ ನಿಮ್ಮ ರಾಜಕೀಯ ಇನ್ನಿಂಗ್ಸ್ ಆಡದಿರುವುದನ್ನು ನೋಡಿ ತುಂಬಾ ಸಂತೋಷವಾಯಿತು. ನಿಮ್ಮ ಮುಂದಿನ ಜೀವನ ಸುಖಕರವಾಗಿರಲಿ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.