ಕಲಬುರಗಿ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಮಿಣಿ ಮಿಣಿ ಪೌಡರ್ ಕುರಿತು ಬಿಜೆಪಿ ಮಾಡುತ್ತಿರುವ ಟ್ರೋಲ್ಗೆ ಕಟುವಾಗಿ ಟೀಕಿಸಿದ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ನನ್ನ ಮುಖವೂ ಮಿಣಿಮಿಣಿ ಆಗಿದೆಯಲ್ಲ ಎನ್ನುವ ಮೂಲಕ ತಿರುಗೇಟು ನೀಡಿದರು.
ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಟೆಂಪಲ್ ರನ್ ಮಾಡುತ್ತಿರುವ ಅವರು, ಬುಧವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ಎಚ್.ಡಿ. ಕುಮಾರಸ್ವಾಮಿ ಅವರು ಆ ಪದ ಬಳಸಿದ್ದೇ ತಪ್ಪಾಯ್ತೆ? ಬಿಜೆಪಿಯವರು ಎಲ್ಲವನ್ನೂ ಟೀಕಿಸುವ ಕೆಲಸ ಮಾಡುತ್ತಾರೆ ಎಂದು ಲೇವಡಿ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿ, ನಾನು ಯಾವ ಹುದ್ದೆಯನ್ನೂ ಕೇಳಿಲ್ಲ, ಅಧಿಕಾರವನ್ನೇ ಕೇಳಿಲ್ಲ ಅಂದ ಮೇಲೆ ಅಡ್ಡಗಾಲು ಹಾಕುವ ಪ್ರಶ್ನೆಯೇ ಉದ್ಭವಿಸದು. ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಹೈಕಮಾಂಡ್ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುವೆ ಎಂದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಇತರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿರುವೆ. ಶಾಸಕಾಂಗ ಪಕ್ಷದ ನಾಯಕರು ಮತ್ತು ಕೆಪಿಸಿಸಿ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಆದರೆ ಸ್ವೀಕೃತವಾಗಿಲ್ಲ ಎಂದು ಹೇಳಿದರು.