ಮಾನ್ವಿ: ಕ್ರೀಡಾಕೂಟಗಳು ಹಾಗೂ ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಸಹಕಾರಿಯಾಗಿವೆ ಎಂದು ಶಾಸಕ ಹಂಪಯ್ಯನಾಯಕ ಹೇಳಿದರು.
ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜನ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು. ವಸ್ತು ಪ್ರದರ್ಶನಗಳ ಆಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಜ್ಞಾನ ಹೆಚ್ಚಲಿದೆ. ನೇತಾಜಿ ಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಲವು ವರ್ಷಗಳಿಂದ ಉತ್ತಮ ಫಲಿತಾಂಶ ಪಡೆದುಕೊಳ್ಳುತ್ತಿದ್ದು, ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದು ತಾಲೂಕಿಗೆ ಕೀರ್ತಿ ತರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶಿಕ್ಷಕರ ಪ್ರಯತ್ನದಿಂದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಹೇಳಿದರು. ವಿಜ್ಞಾನ, ಇತಿಹಾಸ, ಗಣಿತ, ವಾಣಿಜ್ಯ, ಕಲಾ, ಪರಿಸರ, ಕೃಷಿ, ಜಾನಪದ, ಸಾಹಿತ್ಯ, ಸಂಸ್ಕೃತಿ, ಕನ್ನಡ, ಹಿಂದಿ, ಇಂಗ್ಲಿಷ್, ಕರಕುಶಲ, ಸಸ್ಯ, ಜೀವಶಾಸ್ತ್ರಕ್ಕೆ ಸಂಬಂಧಿಸಿದ 250 ಕ್ಕೂ ಹೆಚ್ಚು ಮಾದರಿಗಳನ್ನು ಪ್ರದರ್ಶಿಸಲಾಯಿತು. ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಿಸಿದರು. ಪ್ರಮುಖರಾದ ರಾಜು ತಾಳಿಕೋಟೆ, ಶಿವರಾಜ ಪಾಟೀಲ್, ಮುಖ್ಯಶಿಕ್ಷಕಿ ಅನಿಸಾ ಫಾತೀಮಾ ಇದ್ದರು.