ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣ ನಡೆದಾಗ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಚನ್ನಕೇಶವ ಟಿಂಗರೀಕರ್ಗೆ ಹೈಕೋರ್ಟ್ ಸೋಮವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜಿಲ್ಲಾ 3ನೇ ಹೆಚ್ಚುವರಿ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಈ ಹಿಂದೆ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಹೀಗಾಗಿ ನ. 9ರಂದು ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ವೇಳೆ ಸಿಬಿಐ ಪರ ವಕೀಲ ಸುದರ್ಶನ್, ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಿದರು. ಟಿಂಗರೀಕರ್ ಯೋಗೀಶಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಹೀಗಾಗಿ ಅವರನ್ನು ವಿಚಾರಣೆ ನಡೆಸಬೇಕಿದೆ. ಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಕೋರ್ಟ್ಗೆ ಮನವಿ ಮಾಡಿದರು.
ಸಿಬಿಐ ವಿಚಾರಣೆಗೆ ಸಹಕಾರ ನೀಡಲಿದ್ದಾರೆ. ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಟಿಂಗರೀಕರ್ ಪರ ವಕೀಲರು ಕೋರ್ಟ್ಗೆ ಮನವಿ ಮಾಡಿದರು.
ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದರು.
ಟಿಂಗರೀಕರ್ ಯೋಗೀಶಗೌಡ ಹತ್ಯೆ ಪ್ರಕರಣದ ಸಾಕ್ಷಿ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ನೋಟಿಸ್ ಜಾರಿ ಮಾಡಲಾಗಿತ್ತು. ಸದ್ಯ ಹು-ಧಾ ಪೊಲೀಸ್ ಕಮಿಷನರೇಟ್ನಲ್ಲಿ ಇನ್ಸ್ಪೆಕ್ಟರ್ ಆಗಿರುವ ಟಿಂಗರೀಕರ್, ಕಳೆದ ಹಲವು ದಿನಗಳಿಂದ ವೈದ್ಯಕೀಯ ರಜೆ ಮೇಲಿದ್ದಾರೆ. ಸಿಬಿಐ ಬಂಧನ ಭೀತಿಯಿಂದ ಕೆಲ ದಿನ ಕಾಣೆ ಕೂಡ ಆಗಿದ್ದರು.