More

    ಹೆದ್ದಾರಿ ಬಂದ್ ಮಾಡಿ ರೈತರ ಹೋರಾಟ: ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

    ತುಮಕೂರು: ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯಬೇಕು, ಎಂಎಸ್‌ಪಿ ಖಾತ್ರಿ ನೀಡಬೇಕು, ವಿದ್ಯುತ್ ಖಾಸಗೀಕರಣ, ಬೀಜ ಸಂರಕ್ಷಣೆ ಮಸೂದೆ ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಶುಕ್ರವಾರ ನಗರದ ಕ್ಯಾತಸಂದ್ರ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆದು, ಬಿಡುಗಡೆಗೊಳಿಸಿದರು.

    ರೈತಸಂಘ ಮತ್ತು ಹಸಿರುಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ, ಸಂಸತ್ತಿನಲ್ಲಿ ವಾಪಸ್ ಪಡೆದುಕೊಳ್ಳುವವರೆಗೆ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.

    ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಯ್ದೆ ಹಿಂಪಡೆಯುವುದಾಗಿ ಹೇಳಿದ್ದಾರೆ, ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಕಾಯ್ದೆಯನ್ನು ಕಾನೂನಾತ್ಮಕವಾಗಿ ಹಿಂಪಡೆಯುವುದರ ಜತೆಗೆ ರೈತರ ಬೇಡಿಕೆಗಳಾದ ಎಂಎಸ್‌ಪಿ ಖಾತ್ರಿ, ಬೀಜ ಸಂರಕ್ಷಣೆ ಮಸೂದೆ, ವಿದ್ಯುತ್ ಖಾಸಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

    ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದಿರುವ ಎಪಿಎಂಸಿ ಮತ್ತು ಭೂ ಸುಧಾರಣಾ ತಿದ್ದುಪಡಿ ಮಸೂದೆಗಳನ್ನು ವಾಪಸ್ ಪಡೆಯಬೇಕು ಮತ್ತು ಹೋರಾಟದಲ್ಲಿ ಹುತಾತ್ಮರಾಗಿರುವ 700 ರೈತರಿಗೆ ತೆಲಂಗಾಣ ಸರ್ಕಾರದಂತೆ ರಾಜ್ಯ ಸರ್ಕಾರವು 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

    ರೈತರ ಎಲ್ಲ ಬೇಡಿಕೆ ಈಡೇರಿಸಲಿ: ರೈತರ ಬೇಡಿಕೆಗಳು ಬಾಕಿ ಇದ್ದು, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸುವುದೂ ಸೇರಿ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ.ಗೋವಿಂದರಾಜು ಆಗ್ರಹಿಸಿದರು. ಹೋರಾಟದಲ್ಲಿ ಸಾವನ್ನಪ್ಪಿರುವ 700 ರೈತರ ಕುಟುಂಬಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ಅಕಾಲಿಕ ಮಳೆಯಿಂದಾಗಿ ರೈತರಿಗೆ ಉಂಟಾಗಿರುವ ನಷ್ಟವನ್ನು ರಾಜ್ಯ ಸರ್ಕಾರ ತುರ್ತಾಗಿ ತುಂಬಿಕೊಡಬೇಕು, ಕಳೆದ ವರ್ಷದ ಬೆಳೆ ವಿಮೆ ಪರಿಹಾರ ಬಾಕಿ ಇದ್ದು, ಶೀಘ್ರ ಪರಿಹಾರ ಕೊಡಿಸಬೇಕು ಹಾಗೂ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರೈತರ ಬೆಳೆಗೆ ಸೂಕ್ತ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.

    ಮೋದಿ ಸರ್ಕಾರ ನಂಬಲ್ಲ: ಮೋದಿ ಸರ್ಕಾರವನ್ನು ಜನರು ನಂಬಲು ಸಾಧ್ಯವಿಲ್ಲ. ಮುಂಬರುವ ಪಂಚರಾಜ್ಯಗಳ ಚುನಾವಣೆಯಲ್ಲಿ ಸರ್ಕಾರ ಬೀಳುತ್ತೆ ಎಂಬ ಭಯದಿಂದ ಜನರನ್ನು ಮರಳು ಮಾಡಲು ಯತ್ನಿಸುತ್ತಿದ್ದಾರೆ, ಜೀವ ವಿರೋಧಿ ಕಾಯ್ದೆಗಳಾಗಿರುವ ವಿದ್ಯುತ್, ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಎಂದು ಎಐಟಿಯುಸಿ ಕಾರ್ಯದರ್ಶಿ ಗಿರೀಶ್ ಆಗ್ರಹಿಸಿದರು.

    ಫ್ಯಾಸಿಸ್ಟ್ ಸರ್ಕಾರ ರೈತರ ಮುಂದೆ ತಲೆಬಾಗಿದೆ, ವಚನ ಭ್ರಷ್ಟ ಸರ್ಕಾರವನ್ನು ನಂಬುವಂತಿಲ್ಲ, ರೈತರು ಗೆಲ್ಲಬೇಕಾದರೆ ಹೋರಾಟ ಮುಂದುವರಿಯಬೇಕು, ಶಾಸನ ಬದ್ಧವಾಗಿ ಹಿಂಪಡೆಯುಬೇಕು, ಕಿಸಾನ್ ಮೋರ್ಚಾ ಹೋರಾಟಕ್ಕೆ ರಾಜ್ಯದಲ್ಲಿ ಅಪೂರ್ವ ಬೆಂಬಲ ಸಿಕ್ಕಿದೆ.
    ಸ್ವಾಮಿ, ಆರ್‌ಕೆಎಸ್ ಸಂಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts