ತಿ.ನರಸೀಪುರ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ರಾತ್ರಿ ಬನ್ನೂರು ಸಂತೇಮಾಳದ ಬಳಿ ಮೈಸೂರು -ಮಳವಳ್ಳಿ ಮುಖ್ಯರಸ್ತೆಯಲ್ಲಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಮಾತನಾಡಿ, ರಾಜ್ಯ ಸರ್ಕಾರ ಈ ಬರಗಾಲ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಬಿಟ್ಟು ರೈತರ ಮರಣ ಶಾಸನ ಬರೆದಿದೆ. ಮಳೆಯಾಗದ ಪರಿಣಾಮ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗಿದ್ದು, ತಕ್ಷಣವೇ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಘೇರಾವ್ ಮಾಡುವ ಮೂಲಕ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ನೀರು ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ಪ್ರಾಧಿಕಾರ ರದ್ದುಮಾಡಬೇಕು. ಚುನಾವಣೆ ಆಯೋಗದ ರೀತಿ ಸ್ವತಂತ್ರ ಸಂಸ್ಥೆ ರಚನೆ ಮಾಡಿ ರಾಜ್ಯದ ರೈತರನ್ನು ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ಬನ್ನೂರು ಸೂರಿ, ಬನ್ನೂರು ಶ್ರೀನಿವಾಸ್, ಕುಂತನಹಳ್ಳಿ ಸ್ವಾಮಿ, ಆತ್ತಹಳ್ಳಿ ಸಿ.ಲಿಂಗಣ್ಣ, ಅರುಣ್ ಕುಮಾರ್, ರಾಮ, ಹನುಮನಾಳು ಲೋಕೇಶ್, ಪಿ.ಚೇತನ್, ಮಧು, ಆಟೋ ರವಿ, ಲೋಕೇಶ್, ಮಹೇಶ್, ನಟೇಶ್ ಸೇರಿದಂತೆ 50 ಹೆಚ್ಚು ರೈತರು ಭಾಗವಹಿಸಿದ್ದರು.