ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಫೆ.28 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ವಿವಿಧ ಇಲಾಖೆಯ ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ 28 ರಂದು ಸ್ಪರ್ಧಾತ್ಮಕ ಪರೀಕ್ಷ್ಷೆೆ ನಡೆಯುತ್ತಿದೆ. ಇದಕ್ಕೆ ಪ್ರತಿಯೊಂದು ಪರೀಕ್ಷಾ ಕೊಠಡಿಯನ್ನು ಸ್ಯಾನಿಟೈಸ್ ಮಾಡಬೇಕು. ಪರೀಕ್ಷಾ ಅಭ್ಯರ್ಥಿಗಳಿಗೆ ಅಗತ್ಯವಿರುವ ಟೇಬಲ್, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಅಂಗವಿಕಲರಿಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು ಎಂದರು.
ಪ್ರತಿ ಅಭ್ಯರ್ಥಿಗಳಿಗೆ ಥರ್ಮಲ್ ಸ್ಕೀನಿಂಗ್ ತಪಾಸಣೆ ಬಳಿಕ ಒಳ ಬಿಡಬೇಕು. ನಿಗದಿತ ಸಮಯಕ್ಕೆ ಅಭ್ಯರ್ಥಿಗಳ ಹಾಜರಾತಿ, ಪ್ರಶ್ನೆ ಪತ್ರಿಕೆ ಪೂರೈಕೆ, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ನಿಯೋಜನೆ ಸೇರಿ ಹಲವು ಪ್ರಕ್ರಿಯೆಗಳು ನಿಯಮಾನುಸಾರ ನಡೆಯಬೇಕು. ಒಂದು ವೇಳೆ ಯಾವುದೇ ಲೋಪ ಕಂಡುಬಂದಲ್ಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪರೀಕ್ಷೆ ಬರೆಯುವ ಸಂಬಂಧಿಕರನ್ನು ಹೊಂದಿರುವ ಸಿಬ್ಬಂದಿಯನ್ನು ಪರೀಕ್ಷೆಗೆ ಯಾವುದೇ ಕಾರಣಕ್ಕೂ ನಿಯೋಜಿಸಬಾರದು. ಪ್ರತಿಯೊಬ್ಬ ಪರೀಕ್ಷಾ ಮೇಲ್ವಿಚಾರಕರಿಗೆ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಮೇಲ್ವಿಚಾರಕರು ಹೊರತುಪಡಿಸಿ ಇತರೆ ಸಿಬ್ಬಂದಿ ಮೊಬೈಲ್ ಬಳಸುವಂತಿಲ್ಲ. ಒಂದು ವೇಳೆ ಸಮಸ್ಯೆ ಉಂಟಾದಲ್ಲಿ ಕೂಡಲೇ ಸಂಬಂಧಪಟ್ಟ ಬಗೆಹರಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಮತ್ತು ವೀಕ್ಷಕರು ಇದ್ದರು.