ಚಿತ್ರದುರ್ಗ: ಸ್ವಾತಂತ್ರೃದ ಅಮೃತ ಮಹೋತ್ಸವ ಆಚರಣೆ ವಿಷಯ ಅತ್ಯಂತ ಹೆಮ್ಮೆ ತರುವಂಥದ್ದಾಗಿದ್ದು, ನಾವೆಲ್ಲ ಅದನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಡಿಸಿ ಕವಿತಾ ಎಸ್.ಮನ್ನಿಕೇರಿ ನಾಗರಿಕರಲ್ಲಿ ಮನವಿ ಮಾಡಿದರು.
ನೆಹರು ಯುವ ಕೇಂದ್ರ, ಭಾರತೀಯ ಪುರಾತತ್ವ ಇಲಾಖೆ ಹಾಗೂ ದಾವಣಗೆರೆ ವಿವಿ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರೃದ 75 ವರ್ಷಗಳ ಸ್ಮರಣೋತ್ಸವ ಉದ್ಘಾಟಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಸಾಬರಮತಿಯಲ್ಲಿ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರ ತ್ಯಾಗ, ಬಲಿದಾನ ಮಾಡಿದ್ದಾರೆ. ಇಂಥ ಸಂದರ್ಭದಲ್ಲಿ ಅವರ ಹೋರಾಟವನ್ನು ಸ್ಮರಿಸಬೇಕು. ದೇಶದ ಸಂಸ್ಕೃತಿ, ಐತಿಹಾಸಿಕ ಸ್ಥಳಗಳನ್ನು ಸಂರಕ್ಷಿಸಬೇಕಿದೆ ಎಂದರು.
ನೆಹರು ಯುವ ಕೇಂದ್ರದ ಉಪ ನಿರ್ದೇಶಕ ದಯಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ನೆಹರು ಯುವ ಕೇಂದ್ರದ ನಿರ್ದೇಶಕ ಅತುಲ್ ಜೆ.ನಿಕಮ್ ಅಧ್ಯಕ್ಷತೆ ವಹಿಸಿದ್ದರು.
ಭಾರತೀಯ ಪುರಾತತ್ವ ಇಲಾಖೆ ಅಧೀಕ್ಷಕ ಡಾ.ಶಿವಕಾಂತ್ ಬಾಜಪೇಯಿ, ಉಪ ಅಭಿಯಂತರ ಜೆ.ರಂಗನಾಥ್, ನೆಹರು ಯುವ ಕೇಂದ್ರ ಯುವ ಸಮನ್ವಯಾಧಿಕಾರಿ ಎನ್.ಸುಹಾಸ್, ದಾವಣಗೆರೆ ವಿವಿ ಪ್ರಾಧ್ಯಾಪಕರು ಇದ್ದರು.